ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ದೇಶಕ್ಕೆ ಉಜ್ವಲ ಭವಿಷ್ಯ ಕಲ್ಪಿಸಿಕೊಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಾರ್ವಜನಿಕ ವಲಯದ ಆಸ್ತಿಗಳನ್ನು ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ನಗರದ ರೈಲ್ವೆ ನಿಲ್ದಾಣ ಮುಂಭಾಗ ತಾಲೂಕು ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ರೈಲ್ವೆ ತಡೆ ಚಳುವಳಿ ನಡೆಸಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರಾಷ್ಟ್ರೀಯ ಹಣಗಳಿಕೆ ನೀತಿ(ಎನ್ಎಂಪಿ) ಯೋಜನೆಯಡಿ ದೇಶದ 6 ಲಕ್ಷ ಕೋಟಿ ಸಾರ್ವಜನಿಕ ಆಸ್ತಿಯನ್ನು ಕೇಂದ್ರ ಸರ್ಕಾರ ಖಾಸಗಿ ಒಡೆತನಕ್ಕೆ ಮಾರಾಟ ಮಾಡಲು ಹೊರಟಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಜಿ.ವಿನೋದ್ ಕುಮಾರ್ ಮತ್ತು ಗ್ರಾಮಾಂತರ ಅಧ್ಯಕ್ಷ ಅಫ್ತಾಬ್ ಮಹಮದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎನ್ಎಂಪಿ ಯೋಜನೆಯಡಿಯಲ್ಲಿ ಈಗಾಗಲೇ ಸುಮಾರು 26,700 ರಾಷ್ಟ್ರೀಯ ಹೆದ್ದಾರಿ, 150 ರೈಲು, 400 ರೈಲ್ವೆ ನಿಲ್ದಾಣ, 25 ವಿಮಾನ ನಿಲ್ದಾಣ, 9 ಬಂದರು, 2 ರಾಷ್ಟ್ರೀಯ ಕ್ರೀಡಾಂಗಣ, ವಿದ್ಯುತ್ ಘಟಕಗಳು, ಟೆಲಿಕಾಂ ನೆಟ್ವರ್ಕ್ ಹೀಗೆ 13 ಸಾರ್ವಜನಿಕ ವಲಯಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶದ ಜನರನ್ನು ಖಾಸಗಿ ಕಂಪನಿಗಳ ಗುಲಾಮರನ್ನಾಗಿ ಮಾಡಲು ಹೊರಟಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಿಂಬಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ದೇಶದ ಸಾರ್ವಜನಿಕ ಆಸ್ತಿಗಳನ್ನು ಖಾಸಗೀಕರಣ ಮಾಡುವಂತಹ ದೇಶವಿರೋಧಿ ಯೋಜನೆಗಳಿಗೆ ಕಡಿವಾಣ ಹಾಕಬೇಕು. ಹಗೂ ಖಾಸಗಿ ಕಂಪನಿಗಳ ಪರವಾಗಿರುವ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕೆಂದು ಆಗ್ರಹಿಸಿದರು.
ನಗರ ಉಪಾಧ್ಯಕ್ಷ ತೇಜಸ್ ಗೌಡ, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ಗಂಗಾಧರ್, ಐಸಾಕ್, ಶಂಕರ್, ವಾಸಿಂ, ಲಿಯಾಂದರ್, ಜಾವಿದ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post