ಕಲ್ಪ ಮೀಡಿಯಾ ಹೌಸ್
ಭದ್ರಾವತಿ : ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಖಂಡಿಸಿ ಹಾಗೂ ಕಠಿಣ ಕಾನೂನು ಕ್ರಮ ಜಾರಿಗೆ ತರುವಂತೆ ಒತ್ತಾಯಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಿನಿವಿಧಾನಸೌಧ ಎದುರು ಏಕಾಂಗಿ ಪ್ರತಿಭಟನೆ ನಡೆಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಅತ್ಯಾಚಾರ, ದೌರ್ಜನ್ಯಗಳ ಕುರಿತಾದ ಸುದ್ದಿಗಳು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದರಿಂದ ಪೋಷಕರು ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ ಎಂದು ಹೇಳಿದರು.


ಪೊಲೀಸರು ಮಹಿಳೆಯರ ಹಾಗೂ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆದ ತಕ್ಷಣ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಮಾಡುತ್ತಿರುವುದು ಸಂತಸದ ವಿಚಾರ. ಆದರೆ. ಮುಖ್ಯಮಂತ್ರಿಗಳು ಕಾನೂನು ತಜ್ಞರ ಜೊತೆ ಚರ್ಚಿಸಿ ತಪ್ಪಿತಸ್ಥರು ಜೀವಮಾನವಿಡಿ ಜೈಲಿನ ಕಳೆಯುವಂತಾಗಬೇಕು ಹಾಗೂ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸುವಂತಾಗಬೇಕು ಎಂದು ಆಗ್ರಹಿಸಿದರು.


ಇಂತಹ ಕಠಿಣ ಕಾನೂನುಗಳು ಬಂದಾಗ ಮಾತ್ರ ಮಹಿಳೆಯರು, ವಿದ್ಯಾರ್ಥಿನಿಯರು, ಬಾಲಕಿಯರು, ಅಪ್ರಾಪ್ತರು ಹಾಗೂ ರಾಜ್ಯದ ನಾಗರಿಕರು ನೆಮ್ಮದಿಯಿಂದ ಜೀವನ ಸಾಗಿಸುವಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳು ಸಂಬಂಧಿತ ಕಾನೂನು ತಜ್ಞರೊಡನೆ ಚರ್ಚಿಸಿ ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಒತ್ತಾಯಿಸಿ ತಹಸೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















