ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ತನ್ನದೇ ಆದ ಹೆಜ್ಜೆ ಗುರುತನ್ನು ಮೂಡಿಸಿರುವ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ VISL ಶತಮಾನೋತ್ಸವ ನವೆಂಬರ್ 4-5ರಂದು ನಡೆಯಲಿದ್ದು, ಗಣ್ಯಾತಿಗಣ್ಯರು ಇದಕ್ಕೆ ಸಾಕ್ಷಿಯಾಗಲಿದ್ದಾರೆ.
ಕಾರ್ಖಾನೆ ಮಾಜಿ ಉದ್ಯೋಗಿ ಹಾಗೂ ಹಿರಿಯ ಕಲಾವಿದ ಎಸ್. ದೊಡ್ಡಣ್ಣ Actor Doddanna ಮತ್ತು ಮಾಜಿ ಉದ್ಯೋಗಿ, ಹಿರಿಯ ನ್ಯಾಯವಾದಿ ಎಂ.ಎ. ರೇವಣ ಸಿದ್ಧಯ್ಯ ಅವರು ಈ ಕುರಿತಂತೆ ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಕಾಲ ವಿಐಎಸ್’ಎಲ್ ಆವರಣದಲ್ಲಿ ಶತಮಾನೋತ್ಸವ ಸಮಾರಂಭ ನಡೆಯಲಿದ್ದು, ಮೈಸೂರು ರಾಜವಂಶಸ್ಥ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ Yaduveer Krishnadutta Chamaraja Odeyar ಅವರು ನ.4ರಂದು ಉದ್ಘಾಟಿಸಲಿದ್ದಾರೆ ಎಂದರು.
ಭಾರತ ರತ್ನ ಸರ್.ಎಂ. ವಿಶ್ವೇಶ್ವರಾಯ Sir M. Vishweshwaraiah ಮತ್ತು ಮೈಸೂರು ಯದುವೀರ ಅರಸರ ಆಸಕ್ತಿಯಿಂದ ಕಾರ್ಖಾನೆ ಆರಂಭವಾಗಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮಿಗಳು, ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಕೋಡಿ ಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಕೇಂದ್ರ ಸಚಿವರುಗಳಾದ ನಿರ್ಮಲಾ ಸೀತಾರಾಮನ್, Nirmala Seetharaman ಪ್ರಹ್ಲಾದ್ ಜೋಶಿ, Prahlad Joshi ಜ್ಯೋತಿರಾಧಿತ್ಯ ಸಿಂಧ್ಯಾ, ಶೋಭಾ ಕರಂದ್ಲಾಜೆ, Shobha Karndlaje ಎ. ನಾರಾಯಣಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ನಾಡಿನ ಶ್ರೇಷ್ಠ ಸಾಧಕರಾದ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜನಾಥ್, ಕೆಎಲ್’ಇ ಸಂಸ್ಥೆಯ ಮುಖ್ಯಸ್ಥರಾದ ಪ್ರಭಾಕರ ಕೋರೆ, ವಿಆರ್’ಎಲ್ ಸಂಸ್ಥೆಯ ಸಂಸ್ಥಾಪಕರಾದ ವಿಜಯ ಸಂಕೇಶ್ವರ ಅವರನ್ನು ಸನ್ಮಾನಿಸಲಾಗುತ್ತಿದೆ. ನಾಡಿನ ಎಲ್ಲಾ ಮಾಜಿ ಮುಖ್ಯಮಂತ್ರಿಗಳನ್ನು ಸಹ ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದರು.
ನವೆಂಬರ್ 5 ರಂದು ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DKShivakumar ಭಾಗಿಯಾಗಲಿದ್ದಾರೆ. ಸಚಿವರಾದ ಎಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಡಾ. ಎಚ್.ಸಿ. ಮಹದೇವಪ್ಪ, ಎನ್. ಚೆಲುವರಾಯ ಸ್ವಾಮಿ, ಕೃಷ್ಣ ಭೈರೇಗೌಡ, ಕೆ.ಜೆ. ಜಾರ್ಜ್, ಜಮೀರ್ ಅಹಮದ್ ಖಾನ್, ಎಸ್.ಎಸ್. ಮಲ್ಲಿಕಾರ್ಜುನ್, ಶಿವರಾಜ್ ತಂಗಡಗಿ, ಮಲ್ಲಿಕಾರ್ಜುನ್, ಈಶ್ವರಖಂಡ್ರೆ ಅವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.
ಮೈಸೂರಿನ ಮಹಾರಾಜರಾಗಿದ್ದ ಯದುವಂಶದ ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹದ್ದೂರ್ Nalvadi Krishnaraja Odeyar ಅವರ ಸುವರ್ಣ ಆಡಳಿತ ಕಾಲದಲ್ಲಿ ದಿವಾನರಾಗಿದ್ದ ಸರ್.ಎಂ. ವಿಶ್ವೇಶ್ವರಾಯ ಅವರ ಮಾರ್ಗದರ್ಶನದಂತೆ ಈ ಬೃಹತ್ ಉದ್ಯಮವನ್ನು 1923 ರಲ್ಲಿ ಸ್ಥಾಪಿಸಲಾಯಿತು. ಎರಕಹೊಯ್ದ ಕಬ್ಬಿಣ, ಕಬ್ಬಿಣದ ಕೊಳವೆ ಹಾಗೂ ರೋಲಿಂಗ್ ಮಿಲ್ಫ್ ಮತ್ತು ಸಿಮೆಂಟ್ ಪ್ಲಾಂಟ್ ಅನ್ನು ನಂತರ ಆರಂಭಿಸಲಾಯಿತು. ಪ್ರಾರಂಭದಲ್ಲಿ ಕಾರ್ಖಾನೆಯನ್ನು ಮೈಸೂರು ಐರನ್ ಅಂಡ್ ಸ್ಟೀಲ್ ವರ್ಕ್ಸ್ ಎಂದು ನಾಮಕರಣ ಮಾಡಲಾಯಿತು ಎಂದರು.
1975 ರಲ್ಲಿ ವಿಶ್ವೇಶ್ವರಾಯ ಐರನ್ ಅಂಡ್ ಸ್ಟೀಲ್ ಲಿಮಿಟೆಡ್ ಎಂಬುದಾಗಿ ಮರುನಾಮಕರಣವಾಯಿತು. ಭಾರತೀಯ ಉಕ್ಕು ಪ್ರಾಧಿಕಾರ 1989ರಲ್ಲಿ ಇದನ್ನು ತನ್ನ ಅಂಗಸಂಸ್ಥೆಯಾಗಿ ಸೇರಿಸಿ ನಂತರ 1998 ರಲ್ಲಿ ವಿಲೀನಗೊಳಿಸಿಕೊಂಡಿತು. ಸರ್.ಎಂ. ವಿಶ್ವೇಶ್ವರಯ್ಯನವರ ನಿಸ್ವಾರ್ಥ ಸೇವೆ ಮತ್ತು ಮುಂದಾಲೋಚನೆಯಿಂದ ಭದ್ರಾವತಿಯ ಜೀವನಾಡಿಯಾಗಿ ಉಳಿದು ಲಕ್ಷಾಂತರ ಜನರಿಗೆ ಬದುಕು ಮತ್ತು ಜೀವನ ನಿರ್ಮಿಸಿಕೊಟ್ಟಿದೆ ಈ ಕಾರ್ಖಾನೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ವೇದವ್ಯಾಸ, ಬಿ.ಟಿ. ಶ್ರೀನಿವಾಸಗೌಡ, ಎನ್.ಟಿ. ಸತ್ಯನಾರಾಯಣ, ಎಸ್.ಎಸ್. ಶ್ರೀನಾಥ್ ನಾಗಭೂಷಣ್ ಭಾಗವಹಿಸಿದ್ದರು.
(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















