ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್. ಚಂದ್ವಾನಿ ಕರೆ ನೀಡಿದರು.
ಇಲ್ಲಿನ ವಿಐಎಸ್’ಎಲ್ ಕಾರ್ಖಾನೆಯ ವತಿಯಿಂದ ಭದ್ರಾ ಅತಿಥಿ ಗೃಹದಲ್ಲಿ ಆಯೋಜಿಸಲಾಗಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗಾಂಧೀಜಿಯ ತತ್ವಗಳನ್ನು ನಮ್ಮ ದಿನನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡು ಸಮಾಜದಲ್ಲಿ ನಿರಂತರ ಸುಧಾರಣೆ ತರಲು ಪ್ರಯತ್ನಿಸಬೇಕು ಎಂದರು.ಇದೇ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ಧೂರ್ ಶಾಸ್ತ್ರಿಯವರ ಜಯಂತಿಯನ್ನು ಜ್ಞಾಪಿಸುತ್ತಾ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಧಾರ್ಮಿಕ ಗ್ರಂಥಗಳಿಂದ ಆಯ್ದ ಭಾಗಗಳ ಪಠಣವನ್ನು ಮಾಡಲಾಯಿತು. ಭಗವದ್ಗೀತೆಯನ್ನು ಕು.ಅಧಿತ್ರಿ ರಾಘವೇಂದ್ರ (ಕೆ.ಎಸ್. ರಾಘವೇಂದ್ರರವರ ಸುಪುತ್ರಿ), ಬೈಬಲ್ ಅನ್ನು ಶಾಜಿ ಅಬ್ರಹಾಂ ಮತ್ತು ಕುರಾನ್ ಅನ್ನು ಕು. ರಿಯಾ ಅಂಜುಮ್ ಹಾಗೂ ಕು. ರಿನಾಜ್ ಅಂಜುಮ್ (ರಿಜ್ವಾನ್ ಬೇಗ್ ರವರ ಪುತ್ರಿಯರು) ಪಠಿಸಿದರು. ಕುಮಾರಿ ಅಧಿತ್ರಿ ರಾಘವೇಂದ್ರ ರಘುಪತಿರಾಘವ ಭಜನೆಯನ್ನು ಸುಶ್ರಾವ್ಯವಾಗಿ ಹಾಡಿ ಎಲ್ಲರೂ ಸಹ ಭಜನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.
ಸೈಲ್ ಶಭಾಷ್ ಯೋಜನೆಯಡಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಉದ್ಯೋಗಿಗಳಿಗೆ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು.
ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್’ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ, ಉಪಾಧ್ಯಕ್ಷರಾದ ಶೋಭಾ ಶಿವಶಂಕರನ್, ಇಸ್ಪಾತ್ ಮಹಿಳಾ ಸಮಾಜ ಇವರುಗಳು ಜ್ಯೋತಿಯನ್ನು ಬೆಳಗಿಸಿ, ಗಾಂಧಿ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು.
ವಿಐಎಸ್ಎಲ್ ಉದ್ಯೋಗಿಗಳು, ವಿಐಎಸ್ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಾಪ್ರಬಂಧಕರಾದ (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮವನ್ನು ವಿಐಎಸ್ಎಲ್ನ ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಅತಿಥಿಗೃಹ ಆಯೋಜಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post