ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಅದ್ದೂರಿಯಾಗಿ ನಾಡಹಬ್ಬ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ನಗರದ ವಿವಿಧ ಸಂಘ-ಸಂಸ್ಥೆಗಳು, ದೇವಸ್ಥಾನ ಸಮಿತಿಗಳು ಸೇರಿದಂತೆ ಪ್ರತಿಯೊಬ್ಬರು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜ್ಕುಮಾರ್ ಕೋರಿದರು.
ದಸರಾ ಅಂಗವಾಗಿ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಪೌರಾಯುಕ್ತ ಕೆ.ಎನ್. ಹೇಮಂತ್ ಮಾತನಾಡಿ, ನಾಡಹಬ್ಬ ದಸರಾ ಆಚರಣೆ ರೂಪುರೇಷೆಗಳನ್ನು ತಿಳಿಸಿದರು. ವಿವಿಧ ದೇವಸ್ಥಾನಗಳ ಸಮಿತಿ ಪ್ರಮುಖರು ಮಾತನಾಡಿ, ದಸರಾ ಮೆರವಣಿಗೆ ವ್ಯವಸ್ಥಿತವಾಗಿ ನಡೆಯಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ಆರಂಭಗೊಳ್ಳಬೇಕು. ನಗರದ ಎಲ್ಲಾ ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನ ಸಮಿತಿಯವರು ಎಲ್ಲಾ ರೀತಿಯ ಸಿದ್ದತೆಗಳನ್ನು ಮುಂಚಿತವಾಗಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಲಾಯಿತು.

ಮೆರವಣಿಗೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ, ಸ್ವಸಹಾಯ ಸಂಘಗಳ ಮಹಿಳೆಯರು, ಅಂಗನವಾಡಿ ಹಾಗು ಆಶಾಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಬೇಕು. ಜೊತೆಗೆ ಮೆರವಣಿಗೆಯಲ್ಲಿ ಶಾಲಾ-ಕಾಲೇಜು, ಪೊಲೀಸ್ ಹಾಗು ಗೃಹರಕ್ಷಕ ದಳದಿಂದ ಪಥಸಂಚಲನ ನಡೆಸಬೇಕು. ಇದರಿಂದ ಮೆರವಣಿಗೆಗೆ ಮತ್ತಷ್ಟು ಮೆರಗು ಬರಲಿದೆ ಎಂದು ಸಲಹೆ ವ್ಯಕ್ತಪಡಿಸಲಾಯಿತು.
ನಗರಸಭೆ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಡಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಇಲ್ಲಿನ ನಾಡಹಬ್ಬ ದಸರಾ ಆಚರಣೆಗೆ ವಿಶಿಷ್ಟವಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ.
ಈ ನಡುವೆ ಜಿಲ್ಲಾ ಧಾರ್ಮಿಕ ಪರಿಷತ್ ನಿರ್ದೇಶಕ ಕೆ. ರಮಾಕಾಂತ ಮಾತನಾಡಿ, ನಾಡಹಬ್ಬಕ್ಕೆ ತಹಸೀಲ್ದಾರ್ ಅವರನ್ನು ಸಂಪ್ರದಾಯ ಬದ್ಧವಾಗಿ ಆಹ್ವಾನಿಸುವುದನ್ನು ಇಂದಿಗೂ ರೂಢಿಸಿಕೊಂಡು ಬರಲಾಗಿದೆ. ಇಂತಹ ಪದ್ದತಿ ಜಿಲ್ಲೆಯಲ್ಲಿ ಎಲ್ಲೂ ಸಹ ಆಚರಣೆಯಲ್ಲಿಲ್ಲ ಎಂಬುದು ವಿಶೇಷವಾಗಿದೆ. ನಗರಸಭೆ ಸದಸ್ಯರು, ಅಧಿಕಾರಿಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಸಹಕರಿಸಿದ್ದಲ್ಲಿ ಇನ್ನೂ ಹೆಚ್ಚಿನ ವೈಭವಯುತವಾಗಿ ಆಚರಿಸಬಹುದು ಎಂದರು.

ನಾಡಹಬ್ಬ ದಸರಾ ಆಚರಣೆ ಸಂಬಂಧ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಇಲಾಖೆಗಳು ಕೈಗೊಳ್ಳಬೇಕಾಗಿರುವ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಪೊಲೀಸ್, ಶಿಕ್ಷಣ, ಲೋಕೋಪಯೋಗಿ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ಮಣಿ ಎಎನ್ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ನಾಡಹಬ್ಬ ದಸರಾ ವಿವಿಧ ಸಮಿತಿಗಳ ಅಧ್ಯಕ್ಷರಾದ ಬಿ.ಎಂ ಮಂಜುನಾಥ, ಕೆ. ಸುದೀಪ್ ಕುಮಾರ್, ವಿ. ಕದಿರೇಶ್, ಚನ್ನಪ್ಪ, ಸರ್ವಮಂಗಳ ಭೈರಪ್ಪ, ಉದಯ್ ಕುಮಾರ್, ಬಷೀರ್ ಅಹಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post