ಕಲ್ಪ ಮೀಡಿಯಾ ಹೌಸ್ | ಬೀದರ್ |
ರಾಜ್ಯದಲ್ಲಿರುವ ಪತ್ರಕರ್ತರಿಗೆ ರಾಜ್ಯ ಸರ್ಕಾರ ನಿವೇಶನ ಒದಗಿಸಿಕೊಡುವ ಕೆಲಸ ಮಾಡಬೇಕು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandrppa Khashempur ಸರ್ಕಾರವನ್ನು ಒತ್ತಾಯಿಸಿದರು.
ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಜಿಲ್ಲಾ ಘಟಕ ಬೀದರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ನಗರದ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ದಿನದಿಂದ ದಿನಕ್ಕೆ ತಂತ್ರಜ್ಞಾನ ಮುಂದುವರೆಯುತ್ತಿದೆ. ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚುತ್ತಿದೆ. ಈ ನಡುವೆ ಕೂಡ ಮುದ್ರಣ ಮಾಧ್ಯಮ ಮಹತ್ವವನ್ನು ಉಳಿಸಿಕೊಂಡು ಸಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಪತ್ರಿಕೆಗಳು ಬಹಳಷ್ಟು ಕೆಲಸ ಮಾಡಿವೆ. ಪತ್ರಿಕೆಗಳು ಬಹಳಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ನಾಡು, ನುಡಿಯ ವಿಷಯದಲ್ಲಿ ಪತ್ರಿಕೆಗಳು ಕಾಲಕಾಲಕ್ಕೆ ಧ್ವನಿ ಎತ್ತುವ ಕೆಲಸ ಮಾಡಿವೆ ಎಂದು ಹೇಳಿದರು.
ಕನ್ನಡ ಪತ್ರಿಕೋದ್ಯಮಕ್ಕೆ ತನ್ನದೇಯಾದ ಇತಿಹಾಸವಿದೆ. ಪತ್ರಕರ್ತರು ಸಮಾಜದಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತಾರೆ. ಆದರೆ ಅವರಿಗೆ ಸರಿಯಾದ ವೇತನ, ನಿವೇಶನಗಳು ಇರುವುದಿಲ್ಲ. ಸರ್ಕಾರ ಪತ್ರಕರ್ತರಿಗೆ ನಿವೇಶನ ಒದಗಿಸಿಕೊಡುವ ಕೆಲಸ ಮಾಡಬೇಕು. ಸರ್ಕಾರ ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಅವರಿಗೆ ಮನೆ ಕಟ್ಟಿಸಿಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಹಂಗಾಮಿ ಸಭಾಪತಿಗಳಾದ ರಘುನಾಥರಾವ್ ಮಲ್ಕಾಪೂರೆ, ಬೀದರ್ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ, ವಿಧಾನ ಪರಿಷತ್ ಸದಸ್ಯರಾದ ಅರವಿಂದ ಕುಮಾರ್ ಅರಳಿ, ಪತ್ರಕರ್ತರಾದ ಶಿವಶರಣಪ್ಪ ವಾಲಿ, ಗಂಧರ್ವ ಸೇನಾ, ಮಾಳಪ್ಪ ಅಡಸಾರೆ, ಶಶಿಕುಮಾರ್ ಪಾಟೀಲ್, ಚಂದ್ರಕಾಂತ ಪಾಟೀಲ್, ಡಿ.ಕೆ ಗಣಪತಿ, ವಿಜಯಕುಮಾರ್ ಪಾಟೀಲ್, ಸಿದ್ದರಾಮಯ್ಯ ಸ್ವಾಮಿ, ದೀಪಕ್ ವಾಲಿ ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post