ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನಾಲ್ಕನೆಯ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇಂದು ಸಂಜೆ ರಾಜಭವನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪನವರಿಗೆ ರಾಜ್ಯಪಾಲ ವಿ.ಆರ್. ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಹಸಿರು ಶಾಲು ಹೊದ್ದು ಸಾವಿರಾರು ಕಾರ್ಯಕರ್ತರ ಹರ್ಷೋದ್ಗಾರದೊಂದಿಗೆ ರಾಜಭವನಕ್ಕೆ ಆಗಮಿಸಿದ ಯಡಿಯೂರಪ್ಪ ದೇವರ ಹೆಸರಿನಲ್ಲಿ ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಿಜೆಪಿ ನಾಯಕ ಮುರಳೀಧರ್ ಅವರನ್ನು ಹೊರತುಪಡಿಸಿ ಇನ್ನಾವುದೇ ಕೇಂದ್ರ ನಾಯಕರು ಉಪಸ್ಥಿತರಿರಲಿಲ್ಲ. ಹೊರತಾಗಿ, ಮಾಜಿ ಸಿಎಂ ಎಸ್.ಎಂ. ಕೃಷ್ಣ ಸೇರಿದಂತೆ ರಾಜ್ಯ ಬಿಜೆಪಿ ಪ್ರಮುಖರು ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
















