ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ಚಿತ್ರರಂಗದ ಹಿರಿಯ ನಟ, ಕಲಾ ತಪಸ್ವಿ ರಾಜೇಶ್(89) ಇಂದು ವಿಧಿವಶರಾಗಿದ್ದಾರೆ.
ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಸುಕಿನ 2.30ರಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನಲ್ಲಿ ಜನಿಸಿದ್ದ ಇವರ ನಿಜನಾಮ ಮುನಿ ಚೌಡಪ್ಪ. ಚಿಕ್ಕವಯಸ್ಸಿನಲ್ಲೇ ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡ ಮುನಿ ಚೌಡಪ್ಪ ರಂಗಭೂಮಿ ಪ್ರವೇಶಿಸಿದರು. ತಂದೆ-ತಾಯಿಗೆ ಗೊತ್ತಿಲ್ಲದಂತೆ ಸುದರ್ಶನ ನಾಟಕ ಮಂಡಳಿ ಸೇರಿದ ಮುನಿ ಚೌಡಪ್ಪ ರಂಗಭೂಮಿಯಲ್ಲಿ ವಿದ್ಯಾಸಾರ್ಗ ಹೆಸರಿನಿಂದ ಗುರುತಿಸಿಕೊಂಡರು.
ಬಳಿಕ ತಮ್ಮದೇ ಆದ ಶಕ್ತಿ ನಾಟಕ ಮಂಡಳಿಯನ್ನು ವಿದ್ಯಾಸಾಗರ್ ರೂಪಿದರು. ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಚಂದ್ರೋದಯ, ಕಿತ್ತೂರು ರಾಣಿ ಚೆನ್ನಮ್ಮ ಮುಂತಾದ ನಾಟಕಗಳ ಮೂಲಕ ವಿದ್ಯಾಸಾಗರ್ ಗಮನ ಸೆಳೆದರು.
ನಟನಾಗುವ ಇಚ್ಛೆ ಹೊಂದಿದ್ದ ರಾಜೇಶ್ ಅವರು ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕೆಲಸ ಆರಂಭಿಸಿದರು. ರಂಗಭೂಮಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ವಿದ್ಯಾಸಾಗರ್ ಅವರನ್ನು ವೀರ ಸಂಕಲ್ಪ ಸಿನಿಮಾದ ಮೂಲಕ ಹುಣಸೂರು ಕೃಷ್ಣಮೂರ್ತಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















