ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಾವು ಹಿಂದೆ ಕೊಟ್ಟ ಮಾತಿನಂತೆ ನಡೆಯಲು ಬದ್ದನಾಗಿದ್ದು, ಈ ಹಿನ್ನೆಲೆಯಲ್ಲಿ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಿ, ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಹ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ 117 ನೆಯ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.
ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ. ಅವರಿಂದಲೇ ಈ ಸರ್ಕಾರ ಮುಂದುವರೆಯಲು ಅವಕಾಶವಾಗಿದೆ. ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದರು.
ಈ ವೇಳೆ ಮಾತನಾಡಿದ ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ, ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಸಿಎಂ ಯಡಿಯೂರಪ್ಪ ಜನ್ಮಭೂಮಿಯಲ್ಲಿ ಬಿಜೆಪಿ ಪಾರುಪಾತ್ಯ ಸ್ಥಾಪಿಸಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ಮಾಡಿ ಈಗ ಸುಮ್ಮನಾಗಿದ್ದಾರೆ ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನು, ಇಂದು ಬೆಳಿಗ್ಗೆ ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ನೂತನ ಶಾಸಕರುಗಳಾದ ಎಸ್.ಟಿ. ಸೋಮಶೇಖರ್ ಮತ್ತು ಭೈರತಿ ಬಸವರಾಜ್ ಅವರು ಇಂದು ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮಿಗಳನ್ನು ಭೇಟಿಯಾಗಿ ಆರ್ಶೀವಾದ ಪಡೆದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
Get in Touch With Us info@kalpa.news Whatsapp: 9481252093
Discussion about this post