ಕಲ್ಪ ಮೀಡಿಯಾ ಹೌಸ್
ಚಾಮರಾಜನಗರ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ ಮನನೊಂದು ಯುವಕನೋರ್ವ ಆತ್ಮಹತ್ಯ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ.
ಗ್ರಾಮದ ದೊಡ್ಡನಾಗಪ್ಪ ಎನ್ನುವವರ ಮಗ ರವಿ (32) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಮೃತನು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಅಭಿಮಾನಿಯಾಗಿದ್ದು, ಯಡಿಯೂರಪ್ಪ ರಾಜೀನಾಮೆ ವಿಚಾರ ತಿಳಿದು ಹಲವರ ಬಳಿ ಬೇಸರ ವ್ಯಕ್ತಪಡಿಸಿದ್ದ ಎನ್ನಲಾಗಿದೆ.
ಆದರೆ ಇಂದು ಬೆಳಿಗ್ಗೆ ತಾನು ನಡೆಸುತ್ತಿದ್ದ ಹೋಟೆಲ್ನಲ್ಲಿ ನೇಣಿಗೆ ಶರಣಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡ್ಲುಪೇಟೆ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಿಎಸ್ವೈ ಸಂತಾಪ:
ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದ ಬಿ.ಎಸ್. ಯಡಿಯೂರಪ್ಪ, ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಯುವಕ ಆತ್ಮಹತ್ಯೆಗೆ ಶರಣಾದ ಸುದ್ಧಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ. ಇದಕ್ಕಾಗಿ ಪ್ರಾಣ ತ್ಯಾಗ ಮಾಡಿಕೊಳ್ಳುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅವರ ಕುಟುಂಬದ ನೋವಿನೊಂದಿಗೆ ತಾನಿದ್ದು, ಅಭಿಮಾನ ಅತಿರೇಕಕ್ಕೆ ಹೋಗದಿರಲಿ ಎಂದು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post