ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ಕಳೆದ ಒಂದು ತಿಂಗಳ ಅವಧಿಯಲ್ಲಿ ನಡೆದ ಹುಲಿ ದಾಳಿಯಿಂದ ಮೂವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ತುರ್ತು ಕ್ರಮವಾಗಿ ನಾಗರಹೊಳೆ ಹಾಗೂ ಬಂಡೀಪುರ ಅರಣ್ಯ ಪ್ರದೇಶದಲ್ಲಿ #Nagarahole – Bandipura Forest area ಸಫಾರಿ ಹಾಗೂ ಚಾರಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಈ ಕುರಿತಂತೆ ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದು, ಎರಡೂ ಪ್ರದೇಶಗಳಲ್ಲಿ ಮುಂದಿನ ಆದೇಶದವರೆಗೂ ಸಫಾರಿ ಹಾಗೂ ಚಾರಣವನ್ನು ತಾತ್ಕಾಲಿಕವಾಗಿ ಬಂದ್ #Safari and Trekking ಮಾಡುವಂತೆ ಸೂಚಿಸಿದ್ದಾರೆ.
ಇನ್ನು, ಹುಲಿ ಸೆರೆ ಕಾರ್ಯಾಚರಣೆಗೆ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲು ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಬಂಡೀಪುರ, ನಾಗರಹೊಳೆ ಸಫಾರಿಯಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು, ವಾಹನ ಚಾಲಕರು ಹಾಗೂ ಸಿಬ್ಬಂದಿ ಎಲ್ಲರೂ ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲ್ಪಟ್ಟಿದ್ದಾರೆ. ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಹಾಗೂ ಹುಲಿ ಯೋಜನೆ ನಿರ್ದೇಶಕರು ಸ್ಥಳದಲ್ಲೇ ಶಿಬಿರ ಹಾಕಿ, ಹುಲಿಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಿದ್ದಾರೆ.
ಇನ್ನು, ಸರಗೂರು ತಾಲೂಕಿನ ಹಳೆ ಹೆಗ್ಗೋಡಿಲು ಗ್ರಾಮದ ರೈತ ಚೌಡಯ್ಯ ನಾಯ್ಕ ಹುಲಿ ದಾಳಿಯಿಂದ ಮೃತಪಟ್ಟಿದ್ದು, ಈ ಕುರಿತು ಸಚಿವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಹುಲಿ ದಾಳಿಯ ಬಳಿಕ ಅಕ್ಟೋಬರ್ 27ರಂದು ಬಂಡೀಪುರದಲ್ಲಿ ಹಾಗೂ ನವೆಂಬರ್ 2ರಂದು ಚಾಮರಾಜನಗರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಹುಲಿ ಸೆರೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಖಂಡ್ರೆ ಸೂಚಿಸಿದ್ದರು. ಆದರೂ ಮತ್ತೊಂದು ದಾಳಿ ನಡೆದಿರುವುದರಿಂದ ಸಫಾರಿ ಬಂದ್ ಮಾಡಲು ಮತ್ತು ಟ್ರಕ್ಕಿಂಗ್ ನಿಷೇಧಿಸಲು ಆದೇಶ ಹೊರಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















