ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಎಲ್ಲ ರೀತಿಯ ಸಮಸ್ಯೆಗಳನ್ನು ಪರಿಹಾರ ಮಾಡಿಕೊಡಲಾಗುವುದು ಎಂದು ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚಿಸಿದ್ದ ನಕಲಿ ಜ್ಯೋತಿಷಿಯಲ್ಲಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಫೋನಿನಲ್ಲೇ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡಲಾಗುವುದು ಎಂದು ಪಂಡಿತ್ ಮೋದಿ ಬೆಟ್ಟಪ್ಪ ಆಸ್ಟಾçಲಜಿ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹೀರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಅದರಲ್ಲಿದ್ದ ಫೋನ್ ನಂಬರ್’ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಆ ವ್ಯಕ್ತಿ ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ 7 ಸಾವಿರ ರೂ. ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ.
ಆನಂತರ ಮತ್ತೆ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತದೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದ್ದಾನೆ. ಆಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಹಿಳೆಯ ದೂರನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ 87,500.00 ರೂ. ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್’ಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಪಿ.ಐ. ಮುತ್ತರಾಜ್, ಪಿಎಸ್’ಐ ನಾಸೀರ್ ಹುಸೇನ್ ಮತ್ತು ಎಸ್.ವಿ. ರಘುನಾಥ್, ಎಎಸ್’ಐ ಎಂ.ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ವಿನಾಯಕ ಮತ್ತು ಅನ್ವರ್ ಪಾಷಾ ಅವರು ಕಾರ್ಯನಿರ್ವಹಿಸಿದ್ದಾರೆ.
Also read: ಭದ್ರಾವತಿ ಹೊಸಮನೆ ಠಾಣೆ ನಿರ್ಮಾಣ, ಮಿಲ್ಟ್ರಿ ಕ್ಯಾಂಪ್ ವಸತಿ ಸಮುಚ್ಛಯಕ್ಕೆ ಶಂಕುಸ್ಥಾಪನೆ
ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















