ಬಾಗಲಕೋಟೆ: ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಹಲವರು ನೀಡುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನೂತನ ಶಾಸಕ ಆನಂದ ನ್ಯಾಮಗೌಡ ಬ್ರಾಹ್ಮಣ ಸಮುದಾಯದ ವಿರುದ್ಧ ಮಾತನಾಡಿದ್ದಾರೆ.
ಜಮಖಂಡಿಯಲ್ಲಿ ಅಲ್ಪಸಂಖ್ಯಾತ ಸಮಾಜದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ತಂದೆ ಸಿದ್ದು ನ್ಯಾಮಗೌಡ ಅವರು 1990ರಲ್ಲಿ ಬ್ರಾಹ್ಮಣ ಸಮುದಾಯದ ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿದ್ದರು. ನಾನು ಈಗ ಅದೇ ಬ್ರಾಹ್ಮಣ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಅವರನ್ನು ಸೋಲಿಸಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಬ್ರಾಹ್ಮಣ ಅಭ್ಯರ್ಥಿ ವಿರುದ್ಧ 40 ಸಾವಿರ ಮತಗಳ ಅಂತರದಲ್ಲಿ ಗೆದ್ದು ರಾಜ್ಯದ ಗಮನ ಸೆಳೆದಿದ್ದೇನೆ ಎಂದು ಹೇಳುವ ಮೂಲಕ ಓಲೈಕೆ ರಾಜಕಾರಣವನ್ನು ಮುಂದುವರೆಸಿದ್ದಾರೆ.
ಈ ಭಾಷಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆನಂದ್ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಲ್ಲದೇ, ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀಕಾಂತ್ ಕುಲಕರ್ಣಿ ಸಹ ಟೀಕಿಸಿದ್ದು, ಆನಂದ್ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.
ತಮ್ಮ ಹೇಳಿಕೆ ವಿವಾದವನ್ನು ಸೃಷ್ಠಿಸಿದ ಹಿನ್ನೆಲೆಯಲ್ಲಿ ತೇಪೆ ಹಚ್ಚಲು ಯತ್ನಿಸಿರುವ ಆನಂದ್ ನ್ಯಾಮಗೌಡ, ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನನ್ನ ಮಾತಿನಿಂದ ನೋವಾಗಿದ್ದರೆ ಸಮುದಾಯದ ಕ್ಷಮೆ ಕೋರುತ್ತೇನೆ ಎಂದಿದ್ದಾರೆ.
Discussion about this post