ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಧಾರವಾಡ: ಕೋವಿಡ್-19ರ 2ನೇ ಅಲೆ ರಾಷ್ಟ್ರದಲ್ಲಿ ಆರಂಭವಾಗಿದ್ದು, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ (ಆರ್ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು ರಾಜ್ಯ ಸರ್ಕಾರ ನಿರ್ದೇಶನ ನೀಡಿದ್ದು, ಇದನ್ನು ಪ್ರಯಾಣಿಕ ಮತ್ತು ಪ್ರಯಾಣಿಕರನ್ನು ಹೊತ್ತು ತರುವ ಸಂಚಾರಿ ವಾಹನಗಳ ನಿರ್ವಾಹಕರು ಮತ್ತು ಮಾಲೀಕರು ಪಾಲಿಸುವ ಅಗತ್ಯವಿದೆಯೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ, ಮದುವೆ ಮತ್ತು ಸಭೆ-ಸಮಾರಂಭಗಳಿಗೆ ಮಾರ್ಷಲ್ಗಳ ನೇಮಕಾತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ ಕೇರಳ ರಾಜ್ಯದಿಂದ ವಿಮಾನದ ಮೂಲಕ ಜಿಲ್ಲೆಗೆ ಪ್ರಯಾಣಿಕರು ಆಗಮಿಸುತ್ತಾರೆ. ಈ ಕುರಿತು ನಿಯಮ ಪಾಲನೆಗಳ ಪರಿಶೀಲನೆಗೆ ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಸ್ಥಳದಲ್ಲಿಯೇ ಕ್ರಮ ಜರುಗಿಸಲು ಎಸಿಪಿ, ಡಿವೈಎಸ್ಪಿ, ಪಾಲಿಕೆಯ ವಲಯ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಧಾರವಾಡ ಮತ್ತು ಹುಬ್ಬಳ್ಳಿಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ತಂಡದ ಸದಸ್ಯರು ಮಹಾರಾಷ್ಟ್ರದಿಂದ ಬರುವ ಕೆಎಸ್ಆರ್ಟಿಸಿ ಮತ್ತು ಖಾಸಗಿ ಬಸ್ ನಿರ್ವಾಹಕರು ಕೊರೊನಾ (ಆರ್ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರದ ಪ್ರಯಾಣಿಕರನ್ನು ಕರೆದುಕೊಂಡು ಬಂದಿದ್ದರೆ ಅಂತಹವರ ಮೇಲೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸಬೇಕು. ಮತ್ತು ಅಂತಹ ಬಸ್ಗಳನ್ನು ಮುಟ್ಟುಗೋಲು ಹಾಕಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶಿಸಿದರು.
ಈಗಾಗಲೇ ಬಸ್ನಿಲ್ದಾಣಗಳಲ್ಲಿ ಆರೋಗ್ಯ ಇಲಾಖೆಯಿಂದ ಪ್ರತಿ ದಿನ ಗಂಟಲು ದ್ರವ ಸಂಗ್ರಹಕ್ಕೆ ವಾಹನಗಳನ್ನು ನಿಲ್ಲಿಸಲಾಗಿದೆ. ಮತ್ತು ಶೀಘ್ರದಲ್ಲಿ ಲಾರಿಗಳು, ಖಾಸಗಿ ಬಸ್ಗಳು ನಿಲ್ಲುವ ಸ್ಥಳಗಳಲ್ಲಿ ಮತ್ತು ರೈಲು ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ವಿಶೇಷ ತಂಡಗಳನ್ನು ನೇಮಿಸಿ ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದೆಂದು ಅವರು ಹೇಳಿದರು.
ಸಾರ್ವಜನಿಕರು ಮಾಸ್ಕ್ ಧರಿಸುವ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಹಾಗೂ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸುವ ಕ್ರಮವನ್ನು ಕಠಿಣಗೊಳಿಸಬೇಕೆಂದು ಪೊಲೀಸ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸರ್ಕಾರದ ಸೂಚನೆಯಂತೆ ಜಿಲ್ಲೆಯ ಗ್ರಾಮೀಣ ಪ್ರದೇಶ ಹಾಗೂ ಮಹಾನಗರ ವ್ಯಾಪ್ತಿಯಲ್ಲಿ ನಡೆಯುವ ಮದುವೆ, ಸಭೆ-ಸಮಾರಂಭಗಳಲ್ಲಿ ಭಾಗವಹಿಸುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಈ ಕುರಿತು ಸ್ಥಾನಿಕವಾಗಿ ಹಾಜರಿದ್ದು ಪರಿಶೀಲಿಸಲು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಸ್ಥಳದಲ್ಲಿಯೇ ದಂಡ ವಿಧಿಸಲು ಮಾರ್ಷಲ್ಗಳನ್ನು ತಕ್ಷಣ ನೇಮಿಸುವಂತೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಅವಳಿ ನಗರದ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಠಾಣಾಧಿಕಾರಿ ಹಾಗೂ ಪಾಲಿಕೆಯ ವಲಯ ಅಧಿಕಾರಿ ಪ್ರತಿದಿನ ಮಾಸ್ಕ್ ಧರಿಸದವರನ್ನು ಗುರುತಿಸಿ ದಂಡ ವಿಧಿಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಪ್ರತಿಯೊಬ್ಬರು ಮಾಸ್ಕ್ ಧರಿಸುವುದರಿಂದ ಮತ್ತು ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದರೊಂದಿಗೆ ಸಮಾಜಕ್ಕೂ ಉಪಕಾರ ಮಾಡಿದಂತಾಗುತ್ತದೆ. ಜನರು ಮಾಸ್ಕ್ ಧರಿಸುವುದೂ ಸಹ ಒಂದು ಸಾಮಾಜಿಕ ಸೇವೆ ಎಂದು ಭಾವಿಸಿ, ಪಾಲಿಸಬೇಕೆಂದು ಮತ್ತು ಈ ಮೂಲಕ ಸಮಾಜದ ಆರೋಗ್ಯ, ಸ್ವಾಸ್ಥ್ಯ ಕಾಪಾಡಲು ತಮ್ಮ ಕೊಡುಗೆ ನೀಡಬೇಕೆಂದು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ವಿನಂತಿಸಿದರು.
ಮಹಾನಗರ ಪಾಲಿಕೆಯ ಆಯುಕ್ತ ಡಾ. ಸುರೇಶ್ ಇಟ್ನಾಳ ಮಾತನಾಡಿ, ಏಪ್ರೀಲ್ 2020ರಿಂದ ಫೆ.2021ರವರೆಗೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 9,504 ಜನರ ಮೇಲೆ ಪ್ರಕರಣ ದಾಖಲಿಸಿ 21,66,900ರೂ. ಹಾಗೂ ಸಾಮಾಜಿಕ ಅಂತರ ಕಾಪಾಡದ 779 ಜನರ ಮೇಲೆ ಪ್ರಕರಣ ದಾಖಲಿಸಿ 1,55,800ರೂ. ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದ 50 ಜನರ ಮೇಲೆ ಪ್ರಕರಣ ದಾಖಲಿಸಿ 8,700ರೂ.ಗಳು ಸೇರಿದಂತೆ ಒಟ್ಟು 23,31,400ರೂ.ಗಳ ದಂಡ ವಸೂಲು ಮಾಡಲಾಗಿದೆ. ಪ್ರತಿದಿನ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಕಾಪಾಡುವ ಕುರಿತು ಡ್ರೈವ್ (ಅಭಿಯಾನ) ಗಳನ್ನು ಹೆಚ್ಚು ಮಾಡಲಾಗುವುದೆಂದು ಹೇಳಿದರು.
ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಜಿ. ಅನುಷಾ ಮಾತನಾಡಿ, ಅವಳಿ ನಗರ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದ 1420 ಪ್ರಕರಣಗಳನ್ನು ದಾಖಲಿಸಿದ್ದು, 3,06,800ರೂ.ಗಳ ದಂಡ ವಿಧಿಸಲಾಗಿದೆ ಎಂದು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಇನ್ಸ್ಪೆಕ್ಟರ್ ವಿಜಯ ಬಿರಾದಾರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ 228 ಪ್ರಕರಣಗಳನ್ನು ದಾಖಲಿಸಿ 22,800ರೂ. ದಂಡ ವಸೂಲು ಮಾಡಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಡಾ. ಬಿ. ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಸುಜಾತಾ ಹಸವೀಮಠ ಸೇರಿದಂತೆ ಆರೋಗ್ಯ, ಕಂದಾಯ, ಸಾರಿಗೆ, ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post