ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಭರವಸೆ ವ್ಯಕ್ತಪಡಿಸಿದ್ದಾರೆ. “ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಇದ್ದೇ ಇರುತ್ತದೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ನೀಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ
ಕೇಂದ್ರ ಸಚಿವ ಕಿರಣ್ ರಿಜಿಜು ಅವರು ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇಲ್ಲ ಎಂಬ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಮಹಿಳಾ ಮೀಸಲಾತಿ ಮಸೂದೆಯ ವಿಚಾರವನ್ನೂ ಪ್ರಸ್ತಾಪಿಸಿದರು.
“ಮಹಿಳಾ ಮೀಸಲಾತಿ ಮಸೂದೆಯನ್ನು ರೂಪಿಸಿ, ಲೋಕಸಭೆಯಲ್ಲಿ ಅಂಗೀಕಾರಗೊಳಿಸಿದ್ದವರು ಕಾಂಗ್ರೆಸ್ ಪಕ್ಷದವರು. ಕರ್ನಾಟಕದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿಯೂ ನಾವು ಮಹಿಳೆಯರಿಗೆ ಹೆಚ್ಚಿನ ಸ್ಥಾನ ನೀಡಿದ್ದೇವೆ. ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಕುರಿತ ವಿಚಾರವೂ ಬಗೆಹರಿಯಲಿದೆ” ಎಂದು ಹೇಳಿದರು.
ಕಿರಣ್ ರಿಜಿಜು ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ರಿಜಿಜು ಅವರು ಕಾಂಗ್ರೆಸ್ ಪಕ್ಷದ ಬಗ್ಗೆ ಚಿಂತಿಸುವುದು ಬೇಡ. ಅವರು ತಮ್ಮ ಪಕ್ಷ ಹಾಗೂ ಸರ್ಕಾರದ ಬಗ್ಗೆ ಆಲೋಚಿಸಲಿ” ಎಂದು ತಿರುಗೇಟು ನೀಡಿದರು.
ದೆಹಲಿ ಪ್ರವಾಸದ ಬಗ್ಗೆ ಸಿಎಂ ಸ್ಪಷ್ಟನೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಹೋಗಲೇಬೇಕಲ್ಲವೆ. ನಿಮಗೆ ಮಾಹಿತಿ ನೀಡಿಯೇ ಹೋಗುತ್ತೇವೆ” ಎಂದು ಹೇಳಿದರು.
ನಿಜಲಿಂಗಪ್ಪ ಅವರಿಗೆ ಗೌರವ ನಮನ
ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರನ್ನು ಸ್ಮರಿಸಿದ ಡಿ.ಕೆ. ಶಿವಕುಮಾರ್, ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ ಎಂದು ಬಣ್ಣಿಸಿದರು.
“ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ನಾವೆಲ್ಲರೂ ಅವರಿಗೆ ಗೌರವ ಸಲ್ಲಿಸಿ ಸ್ಮರಿಸುತ್ತಿದ್ದೇವೆ. ನಾನು ಅನೇಕ ಬಾರಿ ನಿಜಲಿಂಗಪ್ಪ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನಾನು ಹಾಗೂ ಎಸ್.ಎಂ. ಕೃಷ್ಣ ಅವರು ಹಲವು ಬಾರಿ ಅವರೊಂದಿಗೆ ತೆರಳಿದ್ದೇವೆ. ಸೋನಿಯಾ ಗಾಂಧಿ ಅವರೂ ನಿಜಲಿಂಗಪ್ಪ ಅವರನ್ನು ಭೇಟಿ ಮಾಡಬೇಕು ಎಂಬ ಉದ್ದೇಶದಿಂದ ಚಿತ್ರದುರ್ಗಕ್ಕೆ ಆಗಮಿಸಿದ್ದರು. ನಾನು ಎರಡನೇ ಬಾರಿಗೆ ಶಾಸಕನಾದಾಗಲೂ ಕರ್ನಾಟಕ ಭವನದಲ್ಲಿ ಅವರನ್ನು ಭೇಟಿ ಮಾಡಿದ್ದೆ” ಎಂದು ಅವರು ನೆನಪಿಸಿಕೊಂಡರು.
Also read>> ಶಿವಮೊಗ್ಗಕ್ಕೆ ಬರಲಿದೆ ಕಂಠೀರವ ಸ್ಟುಡಿಯೋ, ಕಿರು ಫಿಲ್ಮ್ಂ ಸಿಟಿ | ಹೇಗೆಲ್ಲಾ ಪ್ರಯೋಜನವಾಗಲಿದೆ?
ಕರ್ನಾಟಕ ಏಕೀಕರಣಕ್ಕೆ ನಿಜಲಿಂಗಪ್ಪ ಕೊಡುಗೆ
“ನಿಜಲಿಂಗಪ್ಪ ಅವರು ಕರ್ನಾಟಕಕ್ಕೆ ಗೌರವ ತಂದ ಧೀಮಂತ ನಾಯಕ. ಕರ್ನಾಟಕದ ಏಕೀಕರಣಕ್ಕಾಗಿ ಅವರು ದೊಡ್ಡ ಹೋರಾಟ ನಡೆಸಿದ್ದರು. ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಂಡಿದ್ದ ನಾಯಕರು. ಕರ್ನಾಟಕದಿಂದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದವರಲ್ಲಿ ನಿಜಲಿಂಗಪ್ಪ ಅವರು ಪ್ರಮುಖರು. ಅವರ ಬಳಿಕ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಕೇಂದ್ರ ಮಟ್ಟದಲ್ಲಿ ಕನ್ನಡ ಹಾಗೂ ಕರ್ನಾಟಕದ ಏಕೀಕರಣದ ಪರವಾಗಿ ಧ್ವನಿ ಎತ್ತಿದ ನಾಯಕರಾಗಿದ್ದರು” ಎಂದು ಶಿವಕುಮಾರ್ ಹೇಳಿದರು.
ನಿಜಲಿಂಗಪ್ಪ ಅವರ ಸರಳ ಜೀವನ ಹಾಗೂ ಆಡಳಿತದ ಶೈಲಿಯನ್ನು ಸ್ಮರಿಸಿದ ಅವರು, “ಸರಳತೆ ನಿಜಲಿಂಗಪ್ಪ ಅವರ ಆಸ್ತಿ. ಅವರ ಆಸ್ತಿ ಬೇರೆಯವರ ಪಾಲಾಗಬಾರದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಅವರ ಆಸ್ತಿಯನ್ನು ಸರ್ಕಾರದ ವಶಕ್ಕೆ ಪಡೆದಿದೆ” ಎಂದರು.
ಬಸವಣ್ಣನವರ ಚಿಂತನೆ ಪ್ರತಿಬಿಂಬಿಸಿದ ಆಡಳಿತ
“ನಿಜಲಿಂಗಪ್ಪ ಅವರ ಆಡಳಿತದಲ್ಲಿ ಜಾತ್ಯಾತೀತ ತತ್ವ ಹಾಗೂ ಬಸವಣ್ಣನವರ ಚಿಂತನೆಗಳು ಪ್ರತಿಬಿಂಬಿಸುತ್ತಿದ್ದವು. ಅವರು ಧೀಮಂತ ನಾಯಕ ಹಾಗೂ ಮುಖ್ಯಮಂತ್ರಿಯಾಗಿದ್ದರು. ಇಂತಹ ನಾಯಕರ ಹಾದಿಯಲ್ಲಿ ನಾವೆಲ್ಲರೂ ಸಾಗಬೇಕು” ಎಂದು ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.
ಕಾಂಗ್ರೆಸ್ಗೆ ನಿಜಲಿಂಗಪ್ಪ ಮಾರ್ಗದರ್ಶನ
ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾಗಿ ನಿಜಲಿಂಗಪ್ಪ ಅವರು ನೀಡಿದ ಮಾರ್ಗದರ್ಶನಗಳು ದಾಖಲೆಗಳಲ್ಲಿ ಉಳಿದಿವೆ ಎಂದು ಶಿವಕುಮಾರ್ ಹೇಳಿದರು.
“1924ರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ನಿಜಲಿಂಗಪ್ಪ ಅವರ ಪಾತ್ರವೂ ದೊಡ್ಡದಾಗಿತ್ತು. ರಾಜ್ಯದ ನೀರಾವರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಭದ್ರಾ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಗಳ ಜಾರಿಗೆ ಅವರು ಪ್ರಮುಖ ಪಾತ್ರ ವಹಿಸಿದ್ದರು” ಎಂದು ತಿಳಿಸಿದರು.
ಸರಳ ಜೀವನ ನಡೆಸಿದ್ದ ನಿಜಲಿಂಗಪ್ಪ
ನಿಜಲಿಂಗಪ್ಪ ಅವರು ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಉನ್ನತ ಸ್ಥಾನದಲ್ಲಿದ್ದರೂ ಅತ್ಯಂತ ಸರಳ ಜೀವನ ನಡೆಸಿದ್ದರು ಎಂದು ಶಿವಕುಮಾರ್ ಸ್ಮರಿಸಿದರು.
“ನಿಜಲಿಂಗಪ್ಪ ಅವರು ಮುಖ್ಯಮಂತ್ರಿಯಾಗಿದ್ದರೂ ಅವರ ಪುತ್ರಿ ನಾನು ಓದಿದ ಕಾಲೇಜಿನಲ್ಲಿ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದರು. ಅವರ ಜೀವನ ಸರಳವಾಗಿತ್ತು. ಇಂತಹ ಮಹಾನ್ ನಾಯಕರ ಮಾರ್ಗದರ್ಶನ ನಮಗೆ ಸದಾ ಅಗತ್ಯ. ಅವರ ಕುಟುಂಬದವರಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







