ಶಿವಮೊಗ್ಗ: ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರದ ನೂರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ಈಗ ಇಂತಹುದ್ದೇ ಇನ್ನೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ.
ಹೌದು… ಮೈಸೂರಿನ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1059 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜನವರಿ 4 ರಿಂದ 10 ರ ತನಕ ಶಿವಮೊಗ್ಗದ ಹಳೇ ಜೈಲು ಆವರಣದಲ್ಲಿ ನಡೆಯಲಿದೆ. ಇದಕ್ಕೆ ಸಕಲ ರೀತಿಯಿಂದಲೂ ಸಿದ್ದತೆಗಳು ನಡೆಯುತ್ತಿವೆ.
ಈ ಕಾರ್ಯಕ್ರಮವು ಮೊದಲ ಬಾರಿಗೆ ಮೈಸೂರು ಜಿಲ್ಲೆಯಿಂದ ಹೊರ ಭಾಗದಲ್ಲಿ ನಡೆಯುತ್ತಿದ್ದು, ಜಯಂತಿ ಕಾರ್ಯಕ್ರಮಕ್ಕಾಗಿ ಹಳೆ ಜೈಲು ಆವರಣದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದೆ. ಸುತ್ತೂರು ಮಠ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಕಾರಣ ಕೃಷಿ ಮಳಿಗೆಗಳನ್ನು ಸಹ ತೆರೆಯಲಾಗಿದೆ.
ಇನ್ನು ಈ ಕುರಿತಂತೆ ಮಾತನಾಡಿರುವ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಜನವರಿ ೪ ರಂದು ಧರ್ಮಸ್ಥಳದ ವಿರೇಂದ್ರ ಹೆಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಜಯಂತಿ ನಡೆಯುವ ಪ್ರತಿ ದಿನ ಬೆಳಗ್ಗೆ ಸಿದ್ದೇಶ್ವರ ಸ್ವಾಮೀಜಿಗಳ ಪ್ರವಚನ ನಡೆಯಲಿದೆ ಎಂದಿದ್ದಾರೆ.
ಕಾರ್ಯಕ್ರಮಕ್ಕೆ ಪ್ರತಿನಿತ್ಯ 10 ಸಾವಿರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲರಿಗೂ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಹಿಸಲಿದ್ದು, ಈ ಜಯಂತಿ ಮಹೋತ್ಸ ಸಮಿತಿಯ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ವಹಿಸಿಕೊಳ್ಳಲಿದ್ದಾರೆ ಎಂದರು.
ಜಯಂತಿ ಮಹೋತ್ಸವದ ಅಧ್ಯಕ್ಷರಾದ ಎಸ್. ರುದ್ರೇಗೌಡ ಮಾತನಾಡಿ, ಮಲೆನಾಡಿನ ಶಿವಮೊಗ್ಗದಲ್ಲಿ ನಡೆಯುತ್ತಿರುವ ಈ ಸಮಾರಂಭ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಜ. 4 ರಿಂದ ಜ. 10 ರವರೆಗೆ 7 ದಿನಗಳ ಕಾಲ ಬೆಳಗ್ಗೆ, ಮಧ್ಯಾಹ್ನ, ಸಂಜೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮೈದಾನದಲ್ಲಿ, ಜಗಜ್ಯೋತಿ ಬಸವೇಶ್ವರರ ಅನುಭವ ಮಂಟಪ ನಿರ್ಮಿಸಲಾಗಿದೆ.
ಸುಮಾರು 10 ಎಕರೆ ಜಾಗದಲ್ಲಿ, ಈ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಸುಮಾರು 10 ಸಾವಿರ ಜನರು ಪ್ರಧಾನ ವೇದಿಕೆ ಮುಂಭಾಗ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಲಾಗಿದೆ. ಜೊತೆಗೆ ಪ್ರತಿ ದಿನ 15 ಸಾವಿರ ಜನರಿಗೆ ದಾಸೋಹಕ್ಕಾಗಿ ಭವ್ಯ ಪೆಂಡಾಲ್ ಕೂಡ ನಿರ್ಮಿಸಲಾಗಿದೆ.
ವಸ್ತು ಪ್ರದರ್ಶನಕ್ಕಾಗಿ 250 ಸ್ಟಾಲ್ ಗಳನ್ನು ನಿರ್ಮಿಸಲಾಗಿದ್ದು, ಕೈಗಾರಿಕೆ, ಕೃಷಿ ಹಾಗೂ ಇತರೇ ವಸ್ತುಗಳ ವಸ್ತು ಪ್ರದರ್ಶನ ಹಾಗೂ ಪುಸ್ತಕ ಮಳಿಗೆಗಳನ್ನು ತೆರೆಯಲು ಯೋಜಿಸಲಾಗಿದೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ.
Discussion about this post