ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ತಿಳಿಸಿದರು.
ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮತ್ತು ಪೋಷಕಾಂಶಯುಕ್ತ ಆಹಾರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಬಹುತೇಕ ಮಕ್ಕಳು ಪೋಷಕಾಂಶಯುಕ್ತ ಆಹಾರದ ನ್ಯೂನತೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ಅಸ್ವಸ್ಥರಾಗಿ ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತರಾಗುತ್ತಿದ್ದಾರೆ. ಇದರ ನಿವಾರಣೆಗಾಗಿ ಸರ್ಕಾರವು ಪ್ರತೀ ಹಳ್ಳಿಯಲ್ಲಿ ಪೋಷಕಾಂಶಯುಕ್ತ ಆಹಾರ ಶಿಬಿರ ಮತ್ತು ಪೋಷಣಾ ಅಭಿಯಾನವನ್ನು ನಡೆಸುತ್ತಿರುವುದು ಉಪಯುಕ್ತವಾದ ಕಾರ್ಯವಾಗಿದೆ ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಮಾತನಾಡಿ, ಪೂರ್ವ ಪ್ರಾಥಮಿಕ ಹಂತದಲ್ಲಿ ಮಕ್ಕಳ ಕಲಿಕೆಯ ಜೊತೆಗೆ ಆಹಾರದ ಕ್ರಮಗಳನ್ನು ಪಾಲಿಸುವುದು ಅತ್ಯವಶ್ಯಕವಾಗಿದೆ. ಇದರಲ್ಲಿ ವ್ಯತ್ಯಾಸಗಳಾದರೆ ಮಕ್ಕಳ ಬೆಳವಣಿಗೆಯಲ್ಲಿ ಅಸಮತೋಲನ ಉಂಟಾಗುತ್ತದೆ. ಇದನ್ನು ತಡೆಗಟ್ಟಿ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಆಂದೋಲನವನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ಪೋಷಕರು ಇದರ ಬಗ್ಗೆ ಜಾಗೃತಿ ಪಡೆದು ಮಕ್ಕಳ ಆರೋಗ್ಯವನ್ನು ಸುಸ್ಥಿತಿಯಲ್ಲಿಡಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಚ್.ಜಿ. ಅರ್ಪಿತ, ಸವಿತ, ಪಿಡಿಒ ಚಂದ್ರಿಕ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೋಪಮ್ಮ, ಉಪಾಧ್ಯಕ್ಷರಾದ ಕೆ.ಜಿ. ಗೋಪಾಲ್, ಸದಸ್ಯರಾದ ಉಮಾದೇವಿ ಶ್ರೀನಿವಾಸರೆಡ್ಡಿ, ಆರೋಗ್ಯ ಇಲಾಖೆಯ ಮಾಹಾದೇವಮ್ನ, ಮಂಗಳ, ಗೀತಾ, ಅಂಗನವಾಡಿ ಕಾರ್ಯಕರ್ತೆ ಶಾಂತಮ್ಮ, ಸಹಾಯಕಿಯರಾದ ರಾಧಮ್ಮ, ಪುಷ್ಪ ಭಾಗವಹಿಸಿದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Discussion about this post