ನವದೆಹಲಿ: ರಾಜಕೀಯ ಅನಿಶ್ಚಿತತೆ ಉಂಟಾಗಿರುವ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ತತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಪ್ರಸ್ತಾವನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ್ದು, ತತಕ್ಷಣದಿಂದಲೇ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ.
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ನಿನ್ನೆ ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಬೂಬಾ ರಾಜೀನಾಮೆ ನೀಡುವ ಮೂಲಕ ಸರ್ಕಾರ ಅಸ್ಥಿತ್ವ ಕಳೆದುಕೊಂಡಿತ್ತು. ಇದಾದ 24 ಗಂಟೆಯೊಳಗೇ ರಾಜ್ಯಪಾಲರ ಆಡಳಿತ ಜಾರಿಯಾಗಿದೆ.
ಇನ್ನು, ನಿನ್ನೆ ಸಂಜೆ ಪತ್ರಿಕಾಗೋಷ್ಠಿ ನಡೆಸಿದ್ದ ಮುಫ್ತಿ, ರಾಜ್ಯಪಾಲರಿಗೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಅಲ್ಲದೇ ಇನ್ನು ಸದ್ಯ ಯಾವುದೇ ಪಕ್ಷದೊಂದಿಗೂ ಸಹ ಮೈತ್ರಿ ಚಿಂತನೆಯೂ ನಮ್ಮಲ್ಲಿಲ್ಲ ಎಂಬ ಮಾಹಿತಿಯನ್ನೂ ಸಹ ನೀಡಿದ್ದೇನೆ ಎಂದಿದ್ದರು.
ಈ ಕುರಿತಂತೆ ನಿನ್ನೆ ಬೆಳಗ್ಗೆಯೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿ ಮುಖಂಡ ರಾಮ್ ಮಾಧವ್, ಪಿಡಿಪಿ ಜೊತೆಯಲ್ಲಿ ಕಣಿವೆ ರಾಜ್ಯದಲ್ಲಿ ಮೈತ್ರಿ ಮುಂದುವರೆಸುವ ಸನ್ನಿವೇಶಗಳು ಇಲ್ಲ. ಈ ಹಿನ್ನೆಲೆಯಲ್ಲಿ ಮೈತ್ರಿಯನ್ನು ಅಂತ್ಯ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದರು.
ರಂಜಾನ್ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಇಂತಹ ನಿರ್ಧಾರಕ್ಕೆ ಬಂದಿದೆ.

















