ಕಲ್ಪ ಮೀಡಿಯಾ ಹೌಸ್ | ಹೊಸಕೋಟೆ |
ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿ ಪಕ್ಕದಲ್ಲಿರುವ ಡಾ.ಬಿ. ರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.
ಸೂಲಿಬೆಲೆ ಹೋಬಳಿಯ ತಿಮ್ಮಪ್ಪನಹಳ್ಳಿ ಗ್ರಾಮದ ನಿವಾಸಿ ಸಾಯಿಭವನ್ (13) ಮೃತ ದುರ್ದೈವಿ. ಸಾಯಿಭವನ್ ನಗರದ ಬಾಲಕರ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡಿಕೊಂಡು ವಸತಿ ನಿಲಯದಲ್ಲಿ ವಾಸವಾಗಿದ್ದ. ಶನಿವಾರ ಸಂಜೆ ಬಟ್ಟೆ ಒಗೆದು ಮಹಡಿಯ ಮೇಲೆ ಒಣಗಿ ಹಾಕಿದ್ದ. ಭಾನುವಾರ ಬೆಳಗಿನ ಜಾವ 6 ಗಂಟೆ ಸುಮಾರಿನಲ್ಲಿ ಮಹಡಿಯ ಮೇಲೆ ಹೋಗಿ ಒಣಗಲು ಹಾಕಿದ್ದ ಬಟ್ಟೆಯನ್ನು ತೆಗೆದುಕೊಂಡು ಬಳಿಕ ಪಕ್ಕದಲ್ಲೇ ಇದ್ದ ಮಾವಿನ ಮರದಲ್ಲಿ ಮಾವಿನ ಕಾಯಿ ಕೀಳಲು ಮಹಡಿಯ ಮೇಲೆ ಇದ್ದ ಕಬ್ಬಿಣದ ಸಲಾಕೆಯನ್ನು ತೆಗೆದುಕೊಂಡು ಹೋದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
Also read: ಫೀನಿಕ್ಸ್ ಜೆಡಿಎಸ್ | 27 ವರ್ಷದ ಬಳಿಕ ಗೌಡರ ಕುಟುಂಬಕ್ಕೆ ಕೇಂದ್ರ ಸಂಪುಟದಲ್ಲಿ ಸ್ಥಾನ
ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿ ಸಾಯಿಭವನ್ ಇದೇ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಳೆದ ಮೂರು ದಿನಗಳ ಹಿಂದೆ ಪೋಷಕರು ಆಗಮಿಸಿ ವಸತಿ ನಿಲಯಕ್ಕೆ ಬಿಟ್ಟು ಹೋಗಿದ್ದರು.
ಘಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್ ಕುಮಾರ್, ಜಿಪಂ ಸಿಇಒ ಅನುರಾಧ, ಜಂಟಿ ನಿರ್ದೇಶಕ ದೇವರಾಜು, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೆಶಕ ಟಿಎಲ್ಎಸ್ ಪ್ರೇಮ ಭೇಟಿ ನೀಡಿ ಪರಿಶೀಲಿಸಿ, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























