ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಮಹಿಳೆಯರು ಜೀವನದಲ್ಲಿ ಎದುರಾಗುವ ಅಡೆತಡೆಗಳನ್ನು ಧೈರ್ಯವಾಗಿ ಎದುರಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆ ಮ್ಯಾನೇಜ್ಮೆಂಟ್ ಕಲ್ಕತ್ತಾ ಪ್ರಾಧ್ಯಾಪಕಿ ಹಾಗೂ SWRWWOನ ಹಳೆಯ ಸದಸ್ಯರಾದ ಡಾ. ನಿರ್ಮಲಾ ಗುಡಪತಿ ಕರೆ ನೀಡಿದರು.
ಹುಬ್ಬಳ್ಳಿಯ ಗದಗ ರಸ್ತೆಯಲ್ಲಿರುವ ಚಾಲುಕ್ಯ ರೈಲ್ವೆ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನ #International Women’s Day ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಕುಟುಂಬ ಮತ್ತು ಕೆಲಸದ ಸ್ಥಳಗಳಲ್ಲಿ ವಹಿಸುವ ಬಹುಪಾಲು ಜವಾಬ್ದಾರಿಗಳ ಬಗ್ಗೆ ವಿವರಿಸಿದರು.
ಮಹಿಳೆಯರು ಎದುರಿಸುವ ಅಡೆತಡೆಗಳು ಹಾಗೂ ದಿನನಿತ್ಯದ ಸವಾಲುಗಳನ್ನು ಅವರು ಹೇಗೆ ಧೈರ್ಯದಿಂದ ಎದುರಿಸಿ ಜಯಿಸುತ್ತಾರೆ ಎಂಬುದನ್ನು ಅವರು ವಿವರಿಸಿದರು. ಜೊತೆಗೆ, ಮಹಿಳೆಯರು ತಮ್ಮ ದಿನನಿತ್ಯದ ಜೀವನದಲ್ಲಿ ಮಾಡಿದ ಪ್ರಯತ್ನಗಳು ಮತ್ತು ಸಾಧನೆಗಳನ್ನು ಸ್ವತಃ ಮೆಚ್ಚಿಕೊಳ್ಳುವಂತೆ ಪ್ರೋತ್ಸಾಹಿಸಿದರು.
ಸೆಂಟ್ರಲ್ ರೈಲ್ವೆ ಆಸ್ಪತ್ರೆಯ ಡಿಎಂಒ ಡಾ. ವಿನಿತಾ ಅವರು ಒತ್ತಡ ಮತ್ತು ಆತಂಕವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಧಾನಗಳ ಬಗ್ಗೆ ಮಾತನಾಡಿ, ಅಗತ್ಯವಿದ್ದಾಗ ವೈದ್ಯರನ್ನು ಸಂಪರ್ಕಿಸುವ ಮಹತ್ವವನ್ನು ಒತ್ತಿ ಹೇಳಿದರು.
ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಸಹಾಯ ಮಾಡುವ ಭಾರತ ಸರ್ಕಾರದ ಉಪಕ್ರಮವಾದ Tele-MANAS ಕುರಿತು ಕೂಡ ವಿವರಿಸಿದರು.
ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾದ ಅನಂತ್ ಪಿ. ಅವರು ಅಂತಾರಾಷ್ಟ್ರೀಯ ಮಹಿಳಾ ದಿನದ ಮಹತ್ವವನ್ನು ವಿವರಿಸಿ, ಮಹಿಳಾ ಉದ್ಯೋಗಿಗಳ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ನೈಋತ್ಯ ರೈಲ್ವೆ ಆಡಳಿತ ಕೈಗೊಂಡಿರುವ ವಿವಿಧ ಉಪಕ್ರಮಗಳನ್ನು ಪ್ರಸ್ತಾಪಿಸಿದರು. ಸಂಸ್ಥೆಯ ಅಭಿವೃದ್ಧಿಯಲ್ಲಿ ಮಹಿಳಾ ಉದ್ಯೋಗಿಗಳ ಮಹತ್ವದ ಕೊಡುಗೆಯನ್ನು ಅವರು ಶ್ಲಾಘಿಸಿದರು.
ಈ ಆಚರಣೆಯ ಭಾಗವಾಗಿ ಮಹಿಳಾ ಉದ್ಯೋಗಿಗಳನ್ನು ಪ್ರೋತ್ಸಾಹಿಸಲು ಮತ್ತು ಸಬಲೀಕರಿಸಲು ನೈಋತ್ಯ ರೈಲ್ವೆಯಾದ್ಯಂತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, ಅವುಗಳ ವಿಜೇತರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ, ರೈಲು ಸಂಖ್ಯೆ 20607 ಡಾ. ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ವಂದೇ ಭಾರತ್ ಎಕ್ಸ್’ಪ್ರೆಸ್ ಅನ್ನು ಬೆಂಗಳೂರು ಮತ್ತು ಮೈಸೂರು ನಡುವೆ ಸಂಪೂರ್ಣ ಮಹಿಳಾ ಸಿಬ್ಬಂದಿಯೊAದಿಗೆ ಸಂಚಾಲಿಸಲಾಯಿತು. ಇದು ರೈಲ್ವೆ ಕಾರ್ಯಾಚರಣೆಯಲ್ಲಿ ಮಹಿಳಾ ಸಿಬ್ಬಂದಿಯ ಸಾಮರ್ಥ್ಯ ಮತ್ತು ಅವರ ಮಹತ್ವದ ಕೊಡುಗೆಯನ್ನು ಪ್ರತಿಬಿಂಬಿಸುತ್ತದೆ. ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯನ್ನು ಪ್ರತಿನಿಧಿಸಿ ರಮಾ ದೇವಿ ಅವರು ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ನೈಋತ್ಯ ರೈಲ್ವೆಯ ಪ್ರಧಾನ ಮುಖ್ಯ ಸಿಬ್ಬಂದಿ ಅಧಿಕಾರಿಯಾದ ಸೂರ್ಯ ಪ್ರಕಾಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಮುಖ್ಯಸ್ಥರು, ಅಧಿಕಾರಿಗಳು, ಮಹಿಳಾ ಉದ್ಯೋಗಿಗಳು, SWRWWO ಸದಸ್ಯರು ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















