ಹುಬ್ಬಳ್ಳಿ: ಲೋಕಸಭಾ ಚುನಾವಣೆ ವಿಚಾರದಲ್ಲಿ ವಿದ್ಯುನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳಿಗೆ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಅಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದ್ದಾರೆ.
ಇಲ್ಲಿನ ಮಿನಿವಿಧಾನಸೌಧದ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಹುಬ್ಬಳ್ಳಿ ತಹಸೀಲ್ದಾರ ಕಾರ್ಯಾಲಯ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಮಾಧ್ಯಮ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟವಾಗಿರುವ ಭಾರತದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಿಕೊಂಡು ಬಂದಿರುವ ಹಿರಿಮೆಯನ್ನು ಭಾರತ ಚುನಾವಣಾ ಆಯೋಗ ಹೊಂದಿದೆ. ನಿಷ್ಪಕ್ಷಪಾತ ಚುನಾವಣೆಗಳಿಗೆ ಮಾಧ್ಯಮಗಳ ಕೊಡುಗೆಯೂ ದೊಡ್ಡದಿದೆ ಎಂದರು.
ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವಿದ್ಯನ್ಮಾನ ಹಾಗೂ ಸಾಮಾಜಿಕ ಮಾಧ್ಯಮಗಳ ಮುಖಾಂತರ, ಬಲ್ಕ್ ಎಸ್ಎಂಎಸ್ ಮೂಲಕ ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯನ್ನು ಬೆಂಬಲಿಸಿ ಜಾಹೀರಾತು ಪ್ರಕಟಿಸುವ ಮುನ್ನ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಸಮಿತಿಯ ಅನುಮತಿ ಪಡೆಯುವದು ಕಡ್ಡಾಯವಾಗಿರುತ್ತದೆ ಎಂದರು.
ವಿದ್ಯುನ್ಮಾನ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳು ಅಥವಾ ರಾಜಕೀಯ ಪಕ್ಷಗಳ ಅಧಿಕೃತ ಖಾತೆಗಳಲ್ಲಿ ಜಾಹೀರಾತು ಪ್ರಕಟಿಸುವ ಮುನ್ನ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಸಮಿತಿಗೆ ಜಾಹೀರಾತಿನ ಲಿಖಿತ ಮತ್ತು ಡಿಜಿಟಲ್ ಪ್ರತಿಗಳನ್ನು ನಿಗದಿತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಈ ನಿಯಮವು ಬಲ್ಕ್ ಎಸ್ಎಂಎಸ್,ಆಟೋ, ಜೀಪ್, ವಿದ್ಯುನ್ಮಾನ ವಿಡಿಯೋ ಫಲಕ ಹೊಂದಿರುವ ವಾಹನಗಳ ಮೂಲಕ ಕೈಗೊಳ್ಳುವ ಪ್ರಚಾರಕ್ಕೂ ಅನ್ವಯಿಸುತ್ತದೆ ಎಂದರು.
ಮುದ್ರಣ ಮಾಧ್ಯಮಗಳಿಗೆ ಈ ನಿರ್ಬಂಧ ಇಲ್ಲ ಆದರೆ ಅವುಗಳ ಆನ್ಲೈನ್ ಆವೃತ್ತಿ, ಇಪೇಪರ್ಗಳಲ್ಲಿ ಜಾಹೀರಾತು ಪ್ರಕಟಣೆಗೆ ಅನುಮತಿ ಕಡ್ಡಾಯ. ಜೊತೆಗೆ ಮತದಾನಕ್ಕೆ 48 ಗಂಟೆಗಳ ಮುನ್ನ ಅವಧಿಯಲ್ಲಿ ಮುದ್ರಣ ಮಾಧ್ಯಮಗಳಲ್ಲಿ ಪ್ರಕಟಿಸುವ ಜಾಹೀರಾತುಗಳಿಗೆ ಪೂರ್ವಾನುಮತಿ ಪಡೆಯಬೇಕಾಗುತ್ತದೆ. ಈ ನಿಯಮವನ್ನು ಉಲ್ಲಂಘಿಸಿದರೆ ಭಾರತೀಯ ದಂಡ ಸಂಹಿತೆಯ 171ಹೆಚ್ ಕಲಂ ಅನ್ವಯ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದರು.
ಯಾವುದೇ ಪಕ್ಷ ಮತ್ತು ಅಭ್ಯರ್ಥಿಯ ಪರವಾಗಿ ಪ್ರಭಾವ ಬೀರುವ, ಅವರ ಅಭ್ಯರ್ಥಿತನವನ್ನು ಪ್ರೊಥತ್ಸಾಹಿಸುವ ರೀತಿಯಲ್ಲಿ ಸುದ್ದಿಗಳನ್ನು ಪ್ರಕಟಿಸಿದಾಗ ಜಿಲ್ಲಾ ಮಾಧ್ಯಮ ನಿಗಾ ಮತ್ತು ಮಾಧ್ಯಮ ಪ್ರಮಾಣೀಕರಣ ಸಮಿತಿಯ ನಿರ್ಣಯದಂತೆ ಅದನ್ನು ಕಾಸಿಗಾಗಿ ಸುದ್ದಿ ಎಂದು ಪರಿಗಣಿಸಿ,ಅಭ್ಯರ್ಥಿಯ ವೆಚ್ಚಕ್ಕೆ ಸೇರಿಸಲಾಗುವುದು. ಅಂತಹ ಸುದ್ದಿ ಪ್ರಕಟಿಸಿದ ಮಾಧ್ಯಮಗಳ ಕುರಿತು ಭಾರತ ಚುನಾವಣಾ ಆಯೋಗದ ಮೂಲಕ ಭಾರತೀಯ ಪ್ರೆಸ್ ಕೌನ್ಸಿಲ್ ಹಾಗೂ ನ್ಯಾಷನಲ್ ಬ್ರಾಡಕಾಸ್ಟಿಂಗ್ ಪ್ರಾಧಿಕಾರಕ್ಕೆ ಮಾಹಿತಿ ನೀಡಲಾಗುವುದು ಎಂದರು.
ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಮಾತನಾಡಿ, ಅವಳಿ ನಗರಗಳ ಗಡಿ ಭಾಗಗಳಲ್ಲಿ 13 ಹಾಗೂ ಜಿಲ್ಲೆಯ ಗಡಿಭಾಗಗಳಲ್ಲಿ 10 ಚೆಕ್ಪೋಸ್ಟಗಳನ್ನು ಸ್ಥಾಪಿಸಿ ಈಗಾಗಲೇ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲೆಗೆ ಬರುವ, ಹೊರಹೋಗುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಮಾದರಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಅನುಷ್ಠಾನ ಕಾರ್ಯ ನಡೆದಿದೆ ಎಂದರು.
ಜಿಲ್ಲಾ ಸ್ವಿಥಪ್ ಸಮಿತಿ ಅಧ್ಯಕ್ಷರಾಗಿರುವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಮಾತನಾಡಿ, ಜಿಲ್ಲೆಯಾದ್ಯಂತ ಇರುವ 1634 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ 238 ಮತಗಟ್ಟೆಗಳಲ್ಲಿ ಅಲ್ಲಿನ ಸ್ವಿಥಪ್ ಸಮಿತಿ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ. ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ಗಳ ಬಳಕೆಯ ಪ್ರಾತ್ಯಕ್ಷಿಕೆಗಳಲ್ಲಿ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆ ಹಿನ್ನೋಟ ಕೈಪಿಡಿ ಬಿಡುಗಡೆ
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 1952 ರಿಂದ 2014 ರವರೆಗೆ ನಡೆದ ಒಟ್ಟು 16 ಚುನಾವಣೆಗಳ ಮತದಾರರು, ಮತದಾನದ ಪ್ರಮಾಣ, ವಿಜೇತ ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರಗಳೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಕೈಪಿಡಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಪ್ರಾತ್ಯಕ್ಷಿಕೆ
ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಟ್ ಮತಯಂತ್ರಗಳ ಮೂಲಕ ಮತ ಚಲಾಯಿಸುವ ವಿಧಾನ ಹಾಗೂ ಮತದಾನದ ದೃಢೀಕರಣವನ್ನು ಮಾಡಿಕೊಳ್ಳುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ವಿವರಗಳನ್ನು ನೀಡಲಾಯಿತು. ನೇರವಾಗಿ ಪ್ರಾತ್ಯಕ್ಷಿಕೆ ಮೂಲಕ ಅಣುಕು ಮತದಾನ ಮಾಡುವ ಕಾರ್ಯ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ ಇಟ್ನಾಳ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಶಕೀಲ್ ಅಹ್ಮದ್, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ. ಡೊಳ್ಳಿನ, ಹುಬ್ಬಳ್ಳಿ ಶಹರ ತಹಸೀಲ್ದಾರ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ ಸಂಗಪ್ಪ ಬಾಡಗಿ, ಪ್ರೊಬೇಷನರಿ ಡಿವೈಎಸ್ಪಿ ಶರಣಪ್ಪ ಗೌರಿಪುರ, ಸ್ವಿಥಪ್ ಸಮಿತಿಯ ರಿಜ್ವಾನ್ ಅಹ್ಮದ್, ರಮೇಶ ನೂಲ್ವಿ, ಪ್ರೊ.ಪ್ರಸನ್ನ ಪಂಢರಿ ಮತ್ತಿತರರು ಉಪಸ್ಥಿತರಿದ್ದರು.
Discussion about this post