ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಫೆಬ್ರವರಿ 20, 21ರಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ #JobFair ಆಯೋಜಿಸಲಾಗಿದೆ ಎಂದು ಮೂಡಬಿದರೆ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ತಿಳಿಸಿದರು.
ಪಟ್ಟಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #BSYediyurappa ಜನ್ಮದಿನದ ಪ್ರಯುಕ್ತ ಈ ಉದ್ಯೋಗ ಮೇಳವನ್ನು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಲಾಗಿದೆ ಎಂದರು.
ಈ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗ ನೀಡಲು ಸುಮಾರು 83 ಕಂಪನಿಗಳು ಬರುತ್ತಿವೆ. ವಿದ್ಯಾವಂತ ಯುವಕ-ಯುವತಿಯರಿಗೂ ಹಾಗೂ ಅನಕ್ಷರಸ್ಥರಿಗೂ ಉದ್ಯೋಗವಕಾಶ ನೀಡುವ ನಿಟ್ಟಿನಲ್ಲಿ ಆದ್ಯತೆ ನೀಡಲಾಗಿದೆ. ಈ ಅವಕಾಶವನ್ನು ಜಿಲ್ಲೆಯ ಹಾಗೂ ತಾಲೂಕಿನ ಯುವಕ ಯುವತಿಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಆಡಳಿತ ಪ್ರತಿನಿಧಿ ಡಾ.ಜಿ.ಎಸ್. ಶಿವಕುಮಾರ್ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗೆ ಹೊಸ ದಿಕ್ಕು ತೋರಿಸಲು ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.
ಕ್ರಿಯಾಶೀಲ ಸಂಸದರಾದ ಬಿ.ವೈ. ರಾಘವೇಂದ್ರ, ಶಾಸಕರಾದ ಬಿ.ವೈ. ವಿಜಯೇಂದ್ರ ಸಹಕಾರದಿಂದ ಹಾಗೂ ಆಳ್ವಾಸ್ ಎಜುಕೇಷನ್ ಫೌಂಡೇಶನ್ ಟ್ರಸ್ಟಿ ವಿವೇಕ್ ಆಳ್ವಾ ಮಾರ್ಗದರ್ಶನದಲ್ಲಿ ಉದ್ಯೋಗ ಮೇಳ ನಡೆಯುತ್ತಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಸಾವಿರಾರು ಯುವಕ-ಯುವತಿಯರು ಅರ್ಜಿ ಹಾಕಿ ಹೆಸರು ನೋಂದಾಯಿಸಿದ್ದಾರೆ. ಹೆಸರು ನೋದಾಯಿಸದವರು ಕೂಡ ಉದ್ಯೋಗ ಮೇಳದಲ್ಲಿ ನಡೆಯುವ ಸ್ಥಳದಲ್ಲಿ ಹೆಸರು ನೋಂದಾಯಿಸಿ ಪಾಲ್ಗೊಳ್ಳಬಹುದಾಗಿದೆ. ನಿರುದ್ಯೋಗ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಕುಮದ್ಚತಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಎಂ. ವೀರೇಂದ್ರ, ಕುಮದ್ವತಿ ಸಿದ್ಧ ಉಡುಪು ತರಬೇತಿ ಕೇಂದ್ರದ ಪ್ರಾಂಶುಪಾಲ ಕೆ.ಎಸ್. ವಿದ್ಯಾಶಂಕರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















