ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಭದ್ರಾವತಿಯಲ್ಲಿ ಸಂಪೂರ್ಣ ವಿಫಲವಾಗಿದೆ.
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಇಂದು ರಾಜ್ಯ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಇದಕ್ಕೆ ಓಗೊಡದ ಭದ್ರಾವತಿಯ ಮಂದಿ ಎಂದಿನಂತೆ ತಮ್ಮ ಕೆಲಸ ಕಾರ್ಯಗಳನ್ನು ತೊಡಗಿಕೊಂಡಿದ್ದರು.
ನಗರದಲ್ಲಿ ಎಲ್ಲ ರೀತಿಯ ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಚೇರಿ, ಹೊಟೇಲ್, ಮಾರುಕಟ್ಟೆ, ಬ್ಯಾಂಕ್’ಗಳು ತೆರೆದಿದ್ದು, ಎಂದಿನಂತೆ ಗ್ರಾಹಕರಿದ್ದು, ವ್ಯಾಪಾರ ವಹಿವಾಟುಗಳು ನಡೆದವು.
ಇನ್ನು, ಸರ್ಕಾರಿ ಹಾಗೂ ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಚಾರ, ಜನರ ಓಡಾಟ ಸಹಜವಾಗಿದ್ದು, ಬಂದ್’ನ ಛಾಯೆಯೂ ಸಹ ಇರಲಿಲ್ಲ. ಸರ್ಕಾರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆಯೂ ಸಹ ಎಂದಿನಂತೆಯೇ ಇದ್ದುದು ಕಂಡು ಬಂದಿದತು.
ಒಟ್ಟಿನಲ್ಲಿ ಕರ್ನಾಟಕ ಬಂದ್ ನಗರದಲ್ಲಿ ಸಂಪೂರ್ಣ ವಿಫಲವಾಗಿದೆ.
ಹಲವು ಸಂಘಟನೆಗಳಿಂದ ಮನವಿ ಸಲ್ಲಿಕೆ
ಬಂದ್ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಮುಖಂಡರು ಅಂಡರ್ ಬ್ರಿಡ್ಜ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರವನ್ನು ರಾಜ್ಯ ಸರ್ಕಾರ ತತಕ್ಷಣವೇ ಕೈಬಿಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಂಡರ್ ಬ್ರಿಡ್ಜ್’ನಿಂದ ತಾಲೂಕು ಕಚೇರಿವರೆಗೂ ಬೈಕ್ ರ್ಯಾಲಿ ನಡೆಸಿ ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಚಿನ್ನಯ್ಯ, ಸುರೇಶ್, ಕಾಣಿಕ್ ರಾಜ್, ರಾಜು, ಜೆಬಿಟಿ ಬಾಬು, ಬಸವರಾಜ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post