ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ದಿನಗಳಿಂದ ಮುಂದುವರಿದಿದ್ದ ಕುತೂಹಲಕ್ಕೆ ಇಂದು ತೆರೆಬಿದ್ದಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ನೂತನ ಸಚಿವರ ಪಟ್ಟಿ ಅಂತಿಮಗೊಂಡಿದ್ದು, ಕೊನೆಯ ಕ್ಷಣದಲ್ಲಿ ನಡೆದ ಮಹತ್ವದ ಬದಲಾವಣೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಆರಂಭದಲ್ಲಿ ಎಐಸಿಸಿ ಬಿಡುಗಡೆ ಮಾಡಿದ್ದ 20 ಸಚಿವರ ಪಟ್ಟಿಯಲ್ಲಿ ಭಟ್ಕಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಸೇರಿಸಲಾಗಿತ್ತು. ಆದರೆ ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಅಂತಿಮ ಹಂತದಲ್ಲಿ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದ್ದು, ಮಂಕಾಳ ವೈದ್ಯ ಅವರ ಹೆಸರನ್ನು ಕೈಬಿಟ್ಟು ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.
Also read>> ಸೊರಬ : ಬೋರ್ವೆಲ್ ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶ: ಯುವಕ ಸಾವು
ಈ ಅನಿರೀಕ್ಷಿತ ಬೆಳವಣಿಗೆಯಿಂದ ಮಂಕಾಳ ವೈದ್ಯ ಅವರ ಬೆಂಬಲಿಗರಲ್ಲಿ ತೀವ್ರ ನಿರಾಸೆ ಮೂಡಿದ್ದು, ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ ಎಂಬ ನಿರೀಕ್ಷೆಯಲ್ಲಿದ್ದವರಿಗೆ ಕೊನೆಯ ಕ್ಷಣದಲ್ಲಿ ಅವಕಾಶ ಕೈತಪ್ಪಿರುವುದು ಕಾಂಗ್ರೆಸ್ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.
ಮೂಲಗಳ ಪ್ರಕಾರ, ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಕಾಳ ವೈದ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊನೆಯ ಕ್ಷಣದಲ್ಲಿ ಈ ಬದಲಾವಣೆ ಏಕೆ ನಡೆಯಿತು, ಹೈಕಮಾಂಡ್ ಮಟ್ಟದಲ್ಲಿ ಯಾವ ರೀತಿಯ ಚರ್ಚೆಗಳು ನಡೆದವು ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಅವಕಾಶ ನೀಡಲು ಕಾರಣವಾದ ರಾಜಕೀಯ ಲೆಕ್ಕಾಚಾರವೇನು ಎಂಬ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.
ಇಂದು ಸಂಜೆ 4/5 ಗಂಟೆಗೆ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ರಾಜ್ಯ ರಾಜಕೀಯದಲ್ಲಿ ಈ ಸಚಿವ ಸಂಪುಟ ವಿಸ್ತರಣೆ ಹೊಸ ರಾಜಕೀಯ ಸಮೀಕರಣಗಳಿಗೆ ನಾಂದಿ ಹಾಡುವ ಸಾಧ್ಯತೆ ಇದೆ. ಎಸ್.ಎಸ್. ಮಲ್ಲಿಕಾರ್ಜುನ್ ಅವರ ಸಚಿವ ಸಂಪುಟ ಪ್ರವೇಶದಿಂದ ದಾವಣಗೆರೆ ಭಾಗಕ್ಕೆ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ದೊರೆತಂತಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









