ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೋವಿಡ್ ಸುರಕ್ಷಾ ಪಡೆಯಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಣೆ ಮಾಡುತ್ತಿರುವ ರೋಗ ನಿರೋಧಕ ಶಕ್ತಿ ವರ್ಧಕ ಉಚಿತ ಕಿಟ್ ವಿತರಣೆಯನ್ನು ಗ್ರಾಮಾಂತರ ಭಾಗಕ್ಕೂ ಸಹ ವಿಸ್ತರಣೆ ಮಾಡಲಾಗಿದೆ.
ಪಿಳ್ಳಂಗಿರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಇದಕ್ಕೆ ಚಾಲನೆ ನೀಡಿ ಮಾತನಾಡಿದ ಕೋವಿಡ್ ಸುರಕ್ಷಾ ಪಡೆಯ ಅಧ್ಯಕ್ಷ, ಸಚಿವ ಕೆ.ಎಸ್. ಈಶ್ವರಪ್ಪ ಅವರು, ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ನಮ್ಮ ದೇಶದಲ್ಲಿ ಸೋಂಕಿತರ ಹಾಗೂ ಸಾವಿಗೀಡಾದವರ ಸಂಖ್ಯೆ ಕಡಿಮೆಯೇ ಆಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ದಿಟ್ಟ ಕ್ರಮಗಳು ಕಾರಣ. ಕೋವಿಡ್ ಮಹಾಮಾರಿಯನ್ನು ಸಂಪೂರ್ಣವಾಗಿ ಹೊಡೆದೋಡಿಸಲು ಇವರಿಬ್ಬರ ಮಾರ್ಗದರ್ಶನದಲ್ಲಿ ಸರ್ಕಾರ ನಿರಂತರವಾಗಿ ಪ್ರಯತ್ನಗಳನ್ನು ಮಾಡುತ್ತಲೇ ಇದೆ ಎಂದರು.
ಆರಂಭದಲ್ಲಿ ಜನರ ಮಾಸ್ಕ್ ಧರಿಸಲು ಹಿಂಜರಿಯುತ್ತಿದ್ದರು. ಆದರೆ, ಸೋಂಕಿನ ಗಂಭೀರತೆ ಅರಿತು ಜನರು ಸ್ವಯಂಪ್ರೇರಿತರಾಗಿ ಮಾಸ್ಕ್ ಧರಿಸುತ್ತಿದ್ದಾರೆ. ಅದೇ ರೀತಿಯಲ್ಲಿ ಸಾಮಾಜಿಕ ಅಂತರ ಹಾಗೂ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದು ಸೇರಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಸೋಂಕು ತಗುಲುವುದನ್ನು ತಡೆಯಬಹುದು ಎಂದರು.
ಜಿಲ್ಲಾ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ. ಕಾಂತೇಶ್ ಮಾತನಾಡಿ, ಕೋವಿಡ್19 ಸೋಂಕು ಹರಡದಂತೆ ಆರಂಭದಿಂದಲೂ ಸಹ ಪ್ರಧಾನಿಯವರು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಲೇ ಬಂದರು. ಜನರೂ ಸಹ ಇದಕ್ಕೆ ಸ್ಪಂದಿಸಿದರು. ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲೂ ಸಹ ಮುಂಜಾಗ್ರತೆ ವಹಿಸಲೇಬೇಕು. ಇಂತಹ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿವರ್ಧಕ ಕಿಟ್ ಗ್ರಾಮಾಂತರ ಜನರಿಗೂ ಸಹ ತಲುಪಿ, ರೋಗಗಳು ಬಾರದಂತೆ ತಡೆದುಕೊಳ್ಳುವ ಶಕ್ತಿ ಹೆಚ್ಚಾಗಲಿ ಎಂಬ ಕಾರಣದಿಂದ ಗ್ರಾಮಾಂತರ ಭಾಗಕ್ಕೂ ಸಹ ವಿಸ್ತರಣೆ ಮಾಡಲಾಗಿದೆ. ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಸೇರಿದಂತೆ ಹಲವರಿದ್ದರು.
Get In Touch With Us info@kalpa.news Whatsapp: 9481252093
Discussion about this post