ಕಲ್ಪ ಮೀಡಿಯಾ ಹೌಸ್ | ಕಿನ್ನಿಗೋಳಿ |
ದುಬೈನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿ ಇದ್ದ ಕಿನ್ನಿಗೋಳಿ ಸಮೀಪದ ಪುನರೂರಿನ ಯುವತಿ ಶ್ರೀಲತಾ ತಂತ್ರಿ (26) ಅವರು ಮೇ 24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಮೃತರು ಪುನರೂರಿನ ವಾಸುದೇವ ಅಗ್ರಹಾರ ನಿವಾಸಿಯಾಗಿದ್ದು, ಕರಾವಳಿ ಭಾಗದಲ್ಲಿ ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿ, ಜೊತೆಗೆ ಖ್ಯಾತ ನಿರೂಪಕಿಯಾಗಿ ಗುರುತಿಸಿಕೊಂಡಿದ್ದರು.
ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದ ಅವರು 2025ರ ನವೆಂಬರ್ ತಿಂಗಳಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಆರಂಭದಲ್ಲಿ ದುಬೈನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆತರಲಾಗಿತ್ತು.
ಕಳೆದ ಕೆಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲೇ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ರವಿವಾರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು.
ಅವಿವಾಹಿತರಾಗಿದ್ದ ಅವರು ತಾಯಿ ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ. ಯುವ ಕಲಾವಿದೆಯ ಅಕಾಲಿಕ ನಿಧನಕ್ಕೆ ಕರಾವಳಿಯ ಕಲಾ ವಲಯದಿಂದ ತೀವ್ರ ಸಂತಾಪ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









Comments 1