ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಸಮಸ್ಯೆಗಳನ್ನು ಆಲಿಸಿದರು.
Also Read: 250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ
ಮಳೆಯಿಂದಾಗಿ ಹಾನಿಗೊಳಗಾದ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಸಂಸದರು ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಸಂಸದರ ಮುಂದೆ ತಮ್ಮ ಅಹವಾಲು ತೋಡಿಕೊಂಡು ಮಹಿಳೆಯೊಬ್ಬರು, ಚರಂಡಿಗಳಲ್ಲಿ ಗಿಡಗಂಟೆಗಳು ಬೆಳೆದು ನೀರು ಹೋಗದೇ ಅಡ್ಡಿಯಾಗಿದೆ. ನಿಯಮಿತವಾಗಿ ಸ್ವಚ್ಛಗೊಳಿಸದೇ ನಿರ್ಲಕ್ಷ ವಹಿಸಲಾಗುತ್ತಿದೆ. ಇದರಿಂದಾಗಿ ಅಡುಗೆ ಮನೆಗೆ ಕೊಳಚೆ ನೀರು ನುಗ್ಗಿ, ಆಹಾರ ತಯಾರಿಸದ ಸ್ಥಿತಿ ಎದುರಾಗಿದೆ. ಅಧಿಕಾರಿಗಳನ್ನು ಕೇಳಿದರೆ ನೀವು ತಗ್ಗು ಪ್ರದೇಶದಲ್ಲಿ, ಸ್ಲಂಗಳಲ್ಲಿ ಮನೆ ಕಟ್ಟಿಕೊಂಡಿದ್ದೀರಾ ಎಂದು ನಮ್ಮನ್ನೇ ದಬಾಯಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಸ್ಪಂದಿಸಿ ಊರಿನ ಒಳಕ್ಕೆ ಮಳೆನೀರಿನೊಂದಿಗೆ ಹಿಂದಕ್ಕೆ ಬರುತ್ತಿರುವ ಚಾನಲ್ ನೀರಿಗೆ ತಡೆಯೊಡ್ಡುವಂತೆ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸುತ್ತೇವೆ ಎಂದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಡಿಕೆಗಿಂತಲೂ ಅಧಿಕ ಮಳೆ ಸುರಿದಿರುವ ಪರಿಣಾಮ ಬಹಳಷ್ಟು ಹಾನಿಯುಂಟಾಗಿದೆ. ಮಳೆಯಿಂದಾಗಿ ಕುಸಿದಿರುವ ಹಾಗೂ ಕುಸಿಯುವ ಹಂತದಲ್ಲಿರುವ ಮನೆಗಳ ಪಟ್ಟಿ ಮಾಡಲು ಸೂಚಿಸಲಾಗಿದೆ. ಇದೇ ವೇಳೆ ಹಾನಿಗೊಳಗಾಗಿರುವ ಸಾರ್ವಜನಿಕ ಆಸ್ತಿಯ ಕುರಿತಾಗಿ ಪಟ್ಟಿ ಮಾಡಿ, ಶೀಘ್ರ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು, ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಲಾಗಿದ್ದು, ಪರಿಹಾರಕ್ಕೆ ಮನವಿ ಮಾಡಲಾಗಿದೆ. ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪರಿಹಾರದ ಕುರಿತಾಗಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Also Read: ಕೆನಡಾ ಸಂಸತ್’ನಲ್ಲಿ ಕನ್ನಡದಲ್ಲಿ ಮಾತನಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ ಅಲ್ಲಿನ ಸಂಸದ ಚಂದ್ರ ಆರ್ಯ
ಸ್ಮಾರ್ಟ್ ಸಿಟಿ, ಜಿಲ್ಲಾಡಳಿತದ ಅಧಿಕಾರಿಗಳು ನಗರದ ಜನತೆಗೆ ಈ ರೀತಿ ತೊಂದರೆಯಾಗದಂತೆ ಸಮಸ್ಯೆಗೆ ಶಾಶ್ವತ ಪರಿಹಾರ ಶೀಘ್ರವಾಗಿ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ನಿರ್ಮಲಾ ನರ್ಸಿಂಗ್ ಹೋಮ್, ಗಾಂಧಿ ನಗರ, ಬಾಪೂಜಿ ನಗರ, ಶಾಂತಮ್ಮ ಲೇಔಟ್, ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ,ಈ ಸಂದರ್ಭದಲ್ಲಿ ಆಹಾರ ಪೊಟ್ಟಣವನ್ನು ವಿತರಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಮೇಯರ್ ಸುನಿತಾ ಅಣ್ಣಪ್ಪ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಬಳ್ಳಕೆರೆ ಎಸ್.ಎಸ್. ಜ್ಯೋತಿಪ್ರಕಾಶ್, ಧೀರರಾಜ್ ಹೊನ್ನವಿಲೆ, ಮಾಲತೇಶ, ರಾಜೇಶ್ ಕಾಮತ್ ಸೇರಿದಂತೆ ಪ್ರಮುಖರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















