ಕಲ್ಪ ಮೀಡಿಯಾ ಹೌಸ್ | ಮಂಡ್ಯ |
ಅತಿ ಹೆಚ್ಚು ಮಳೆಯಿಂದ ಟಿ.ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿ ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನೀರು ನುಗ್ಗಿ ಬಹಳ ಹಾನಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ CM Basavaraja Bommai ಅವರು ತಿಳಿಸಿದರು.
ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಮಳೆ ನೀರು ತುಂಬಿ ಹಾನಿಯಾಗಿರುವ ಹಿನ್ನೆಲೆ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಭೀಮೇಶ್ವರ ನದಿ ಉಕ್ಕಿ ಹರಿದಿದೆ.ನದಿ ನೀರು ಹೆಚ್ಚಾಗಿ ನೀರು ಸರಬರಾಜು ಘಟಕಕ್ಕೆ ನುಗ್ಗಿ ಬಹಳ ಹಾನಿಯಾಗಿದೆ. 75 ವರ್ಷದ ಬಳಿಕ ಈ ನದಿಯಲ್ಲಿ ಇಷ್ಟು ಪ್ರಮಾಣದ ನೀರು ಬಂದಿದೆ. 5 ಘಟಕಗಳ ಪೈಕಿ 2 ಪಂಪ್ ಹೌಸ್ ಗಳಿಗೆ ನೀರು ನುಗ್ಗಿದೆ ಎಂದರು.
1,450 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್ಗಳಿದ್ದು, 550 ಮತ್ತು 350 ಎಂ.ಎಲ್.ಡಿ ಸಾಮರ್ಥ್ಯದ ಘಟಕಗಳಿದ್ದು, 550 ಎಂ.ಎಲ್.ಡಿ ಸಾಮರ್ಥ್ಯದ ಪಂಪ್ ಹೌಸ್ ಗಳು ಈಗಾಗಲೇ ಕೆಲಸ ಮಾಡುತ್ತಿದ್ದು. ನೀರು ಬೆಂಗಳೂರಿಗೆ ನಿರಂತರವಾಗಿ ಸರಬರಾಜು ಆಗುತ್ತಿದೆ ಎಂದರು.
ನೀರು ತುಂಬಿದ ಎರಡು ಪಂಪ್ ಹೌಸ್ ಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಸ್ಟೇಜ್ 4 ಪಂಪ್ ಹೌಸ್ ನಲ್ಲಿ 12 ಅಡಿ ನೀರು ಹೊರ ತೆಗೆಯಲಾಗಿದೆ, ಇನ್ನೂ 11 ಅಡಿ ನೀರು ತೆಗೆಯಬೇಕು. ಮಧ್ಯರಾತ್ರಿ ಅಥವಾ ನಾಳೆ ಬೆಳಿಗ್ಗೆ ಒಳಗೆ ಈ ಕಾರ್ಯ ಮುಗಿಯಲಿದೆ ಎಂದು ಹೇಳಿದರು. ಯಂತ್ರೋಪಕರಣಗಳನ್ನು ಡ್ರೈ ಮಾಡಿದ ಬಳಿಕ 350 MLD ನೀರನ್ನು ಸರಬರಾಜು ಮಾಡಲಾಗುತ್ತದೆ. ಇದರಿಂದ ಮತ್ತಷ್ಟು ನೀರನ್ನು ಬೆಂಗಳೂರಿಗೆ ಒದಗಿಸಲು ಸಾಧ್ಯವಾಗುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಲು ಪಂಪ್ ಹೌಸ್ ಸುತ್ತಾ ಕಾಂಕ್ರೀಟ್ ತಡೆಗೋಡೆ ಮಾಡಲಾಗುವುದು.
Also read: ಸೊರಬ: ಉಳವಿ ಶಾಲೆಯಲ್ಲಿ ಮಹಾಭಾರತ ವಿಷಯ ಆಧಾರಿತ ರಸಪ್ರಶ್ನೆ ಯಶಸ್ವಿ
ಮಳೆ ನಿರಂತರವಾಗಿ ಸುರಿಯುತ್ತಿದೆ.ರಾಜ್ಯದ ಎಲ್ಲಾ ಕೆರೆ, ಕಟ್ಟೆಗಳು ಭರ್ತಿಯಾಗಿವೆ. ಮಳೆನೀರು, ಕೆರೆನೀರು ಒಟ್ಟಾಗಿ ಹರಿದು ಪ್ರವಾಹದ ಪರಿಸ್ಥಿತಿ ಎದುರಾಗಿದೆ. ಇದರ ಬಗ್ಗೆ ಜಾಗ್ರತೆ ವಹಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ, ಕಂದಾಯ ಇಲಾಖೆಯ ಸಚಿವರಾದ ಆರ್.ಆಶೋಕ್, ನಗರಾಭಿವೃದ್ಧಿ ಖಾತೆ ಸಚಿವರಾದ ಬೈರತಿ ಬಸವರಾಜು, ಶಾಸಕರಾದ ಡಾ.ಕೆ.ಅನ್ನದಾನಿ, ಜಿಲ್ಲಾಧಿಕಾರಿ ಎಸ್.ಅಶ್ವತಿ,ಪೊಲೀಸ್ ವರಿಷ್ಠಾಧಿಕಾರಿ ಎಸ್.ಯತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post