ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಟ ಪುನೀತ್ ರಾಜ್ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅವರು ಅರ್ಹರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರು ಜಿಲ್ಲೆ ಕಬಿನಿ ಜಲಾಶಯ ಭರ್ತಿಯಾಗಿರುವುದು ಸಂತಸ ತಂದಿದೆ. ಇದರಿಂದ ನಾಡಿನ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.


ಪುನಿತ್ ರಾಜ್ಕುಮಾರ್ ಅವರ ಬಗ್ಗೆ ತಮಗೆ ಅಪಾರ ಗೌರವ ಪ್ರೀತಿ ಇದೆ. ಈ ವಿಚಾರವನ್ನು ಸರ್ವಾನುಮತದಿಂದ ಎಲ್ಲರೂ ಒಪ್ಪುತ್ತಾರೆ. ಶಿಫಾರಸ್ಸು ಮಾಡಲು ಅದಕ್ಕೊಂದು ಪದ್ಧತಿ ಇದೆ. ಸರ್ಕಾರವಾಗಿ ಎಲ್ಲವನ್ನೂ ಯೋಚನೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.


ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸುವುದು ವಿಶೇಷ. ಅಂತಾರಾಜ್ಯ ನೀರಿನ ವಿಚಾರ ಇದೆ. ನೀರು ತುಂಬಿರುವುದರಿಂದ ತಮಿಳುನಾಡಿಗೂ ನೀರು ಕೊಡಬಹುದು, ನಾಲೆಗಳಿಗೂ ನೀರು ಹರಿಸಬಹುದು ಎಂದರು.

ಕಳೆದ ವರ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ನಾನು ಕಬಿನಿ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಬಂದಿದ್ದೆ. ನಾನು ಮುಖ್ಯಮಂತ್ರಿಯಾದ ನಂತರ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೀನಿ. ಈಗ ಕಾವೇರಿ ಜಲಾನಯನ ಪ್ರದೇಶದ ಎರಡು ಜಲಾಶಯಗಳಿಗೆ ಬಾಗಿನ ಸಲ್ಲಿಸುತ್ತಿದ್ದೇನೆ ಎಂದು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















