ಕಲ್ಪ ಮೀಡಿಯಾ ಹೌಸ್
ಮೈಸೂರು: ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ತಮಿಳು ನಾಡಿನ ತಿರ್ಪುರ್ ಮೂಲದವರಾಗಿದ್ದು, ಕೂಲಿ ಕಾರ್ಮಿಕರು ಹಾಗೂ ಬಹುತೇಕ ಅನಕ್ಷರಸ್ಥರಾಗಿದ್ದಾರೆ. ಚಾಲಕ, ಕಾರ್ಪೆಂಟರ್, ಕೂಲಿ ಕೆಲಸ ಮಾಡುತ್ತಿದ್ದರು. ಮೈಸೂರಿಗೆ ತರಕಾರಿ ತೆಗೆದುಕೊಂಡು ಆಗಾಗ ಬರುತ್ತಿದ್ದರು. ಅವರಿಂದ ಈ ಕುಕೃತ್ಯ ನಡೆದಿದ್ದು ಅದರಲ್ಲಿ 17 ವರ್ಷದ ಒಬ್ಬ ಬಾಲ ಆರೋಪಿ ಕೂಡ ಇದ್ದಾನೆ ಎಂದು ಮಾಹಿತಿ ನೀಡಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ತನಿಖೆ ಪ್ರಾಥಮಿಕ ಹಂತದಲ್ಲಿದ್ದು ಹೆಚ್ಚಿನ ವಿವರ ನೀಡಲು ಈ ಸಂದರ್ಭದಲ್ಲಿ ಸಾಧ್ಯವಿಲ್ಲ. ಮೈಸೂರಿಗೆ ಆಗಾಗ ಬರುತ್ತಿದ್ದ ಈ ಆರೋಪಿಗಳು ಬಂದು ಹೋಗುವಾಗ ಮದ್ಯಪಾನ ಮಾಡಿ, ಪಾರ್ಟಿ ಮಾಡಿಕೊಂಡು ಹೋಗುತ್ತಿದ್ದರು. ಮೊನ್ನೆ ಆಗಸ್ಟ್ 24ರಂದು ಅತ್ಯಾಚಾರದಂತಹ ಹೀನಕೃತ್ಯ ನಡೆಸಿದ್ದಾರೆ ಎಂದು ಹೇಳಿದರು.

ಸಾಮೂಹಿಕ ಅತ್ಯಾಚಾರದಲ್ಲಿ 6 ಮಂದಿ ಭಾಗಿಯಾಗಿದ್ದು ಓರ್ವ ತಲೆಮರೆಸಿಕೊಂಡಿದ್ದಾನೆ, ಆತನ ಶೀಘ್ರ ಬಂಧನಕ್ಕೆ ಹುಡುಕಾಟ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಇನ್ನೂ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.

ಯುವಕ ಮತ್ತು ಯುವತಿ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ಓಡಾಡುತ್ತಿರುವುದನ್ನು ಕಂಡು ಅವರ ಬಳಿಗೆ ಹೋಗಿ 3 ಲಕ್ಷ ರೂಪಾಯಿ ಹಣಕ್ಕಾಗಿ ಈ ಕಿಡಿಗೇಳಿಗಳು ಬೇಡಿಕೆಯಿಟ್ಟಿದ್ದರು. ಯುವಕನ ಬಳಿ ಹಣ ಕೇಳಿದಾಗ ನೀಡಲಿಲ್ಲ, ಇದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















