ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ:
ಸಂಗೊಳ್ಳಿಯಲ್ಲಿ 189 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಮುಕ್ತಾಯದ ಹಂತದಲ್ಲಿದ್ದು ಈ ಶಾಲೆಯನ್ನು ಸೈನಿಕ ಸ್ಕೂಲ್ ಸೊಸೈಟಿಗೆ ಹಸ್ತಾಂತರಿಸಲು ಅನುವು ಮಾಡಿಕೊಡುವಂತೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಸೈನಿಕ್ ಸ್ಕೂಲ್ ಸೊಸೈಟಿಯ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ಸೈನಿಕ ಸ್ಕೂಲ್ ಮಾನದಂಡಗಳ ಪಾಲನೆಗೆ ಕ್ರಮ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಈ ಶಾಲೆಯನ್ನು ಸೈನಿಕ್ ಸ್ಕೂಲ್ ಸೊಸೈಟಿಯ ಅಧೀನಕ್ಕೆ ಒಳಪಡಿಸಲು ಅನುಮೋದನೆ ನೀಡುವಂತೆ ಕೋರಿದರು.
ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಯ ಕಿರುಹೊತ್ತಿಗೆ ಹಾಗೂ ತಮ್ಮ ಸರ್ಕಾರದ ಯೋಜನೆಗಳಿಂದ ಬಡವರು ಹಾಗೂ ದೀನ-ದಲಿತರಿಗೆ ಮುಂದಿನ ದಿನಗಳಲ್ಲಿ ಆಗುವ ಲಾಭ ಹಾಗೂ ಬದಲಾವಣೆ ಕುರಿತು ಐಸೆಕ್ ಸಂಸ್ಥೆ ನೀಡಿರುವ ಅಧ್ಯಯನ ವರದಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ಶಿವಕುಮಾರ ಉದಾಸಿ, ಉಮೇಶ್ ಜಾದವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















