ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಧಾನಸೌಧದ ಒಳಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳು ಪ್ರವೇಶಿಸದಂತೆ ತಡೆದು, ಒಂದು ಕಡೆ ಮಾತ್ರ ಬೈಟ್ ತೆಗೆದುಕೊಳ್ಳುವಂತೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ನಿರ್ಧಾರ #AuthoritarianAttitude ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #BYVijayendra ಕಿಡಿ ಕಾರಿದ್ದಾರೆ.
ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಸರ್ಕಾರದ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಕ್ಷರಶಃ ಬಂಧನದಲ್ಲಿರಿಸಿ, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿ, ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕಿ ಸರ್ವಾಧಿಕಾರಿತನ ಮೆರೆದ 70 ರ ದಶಕದ ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ – ಕರ್ನಾಟಕ ಕರಾಳ ಇತಿಹಾಸ ಕರ್ನಾಟಕದಲ್ಲಿ ಈಗ ಮರುಕಳಿಸಿದೆ ಎಂದು ಕಿಡಿ ಕಾರಿದ್ದಾರೆ.
ದ್ವೇಷ ಭಾಷಣ ಕಾಯ್ದೆಯನ್ನು ಜಾರಿಗೆ ತರುವ ದುಸ್ಸಾಹಸ ನಡೆಸಿರುವ ಬೆನ್ನಲ್ಲೇ ವಿಧಾನಸೌಧದಲ್ಲಿ ಮಾಧ್ಯಮದ ಮೇಲೆ ನಿಯಂತ್ರಣ ಹೇರುವ ನಿರ್ಬಂಧ ಹೇರಲು ಮಾಧ್ಯಮ ಸ್ವಾತಂತ್ರವನ್ನು ನಿಯಂತ್ರಿಸುವ ಸುತ್ತೋಲೆ ಹೊರಡಿಸಿ, ಮಾಧ್ಯಮ ಕ್ಷೇತ್ರದ ಮೇಲೆ ಅಂಕುಶ ಹಾಕಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೊಂದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಣಕಿಸುವ ಅವಿವೇಕತನದ ಸರ್ವಾಧಿಕಾರಿ ಧೋರಣೆಯಲ್ಲದೇ ಮತ್ತೇನೂ ಅಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ ಕ್ಷೇತ್ರವೆಂದರೆ ಕಾಂಗ್ರೆಸ್ಸಿಗರಿಗೆ ಈ ಮೊದಲಿನಿಂದಲೂ ಅಪಥ್ಯ. ಸಂದರ್ಭ ಬಂದಾಗಲೆಲ್ಲಾ ಮಾಧ್ಯಮದವರ ಮೇಲೆ ದಬ್ಬಾಳಿಕೆ ನಡೆಸುವ ಸಂಸ್ಕೃತಿ ಕಾಂಗ್ರೆಸ್ಸಿಗರು ರೂಢಸಿಕೊಂಡಿದ್ದಾರೆ. ಅದರ ಮುಂದುವರೆದ ಭಾಗವಾಗಿ ಭದ್ರತೆಯ ಹೆಸರಿನಲ್ಲಿ ಮಾಧ್ಯಮ ಸ್ವಾತಂತ್ರಕ್ಕೆ ಕಡಿವಾಣ ಹಾಕಲು ಹೊರಟಿರುವ ಈ ನಿರ್ಧಾರ ಅತ್ಯಂತ ಖಂಡನೀಯ ಹಾಗೂ ನಾಚಿಕೆಗೇಡಿತನದ ಪರಮಾವಧಿಯಾಗಿದೆ ಎಂದಿದ್ದಾರೆ.
ಈ ಕೂಡಲೇ ಈ ಸುತ್ತೋಲೆಯನ್ನು ವಾಪಾಸು ಪಡೆದು, ಕಾಂಗ್ರೆಸ್ ಸರ್ಕಾರ ಮಾಧ್ಯಮ ಬಂಧುಗಳ ಕ್ಷಮೆ ಯಾಚಿಸಬೇಕು. ಪ್ರಜಾಪ್ರಭುತ್ವ ದೇಗುಲ ವಿಧಾನಸೌಧದಲ್ಲಿ ಪಾಳೇಗಾರಿಕೆ ವ್ಯವಸ್ಥೆಯನ್ನು ಅಸ್ತಿತ್ವಕ್ಕೆ ತರಲು ಹೊರಟಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಕಿಡಿ ಕಾರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















