ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಅಗತ್ಯ ವಸ್ತುಗಳ ಖರೀದಿಯ ಹೊರತಾಗಿ ಅನಾವಶ್ಯಕವಾಗಿ ಯಾರಾದರೂ ರಸ್ತೆಗೆ ಇಳಿದರೆ, ಅದನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಮಂಗಳವಾರ ಭದ್ರಾವತಿ ನಗರಸಭೆ ಕಾರ್ಯಾಲಯ ಸಭಾಂಗಣದಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ತಾಲೂಕು ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು.
ಅಗತ್ಯ ವಸ್ತುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸಮಯ ನಿಗದಿಪಡಿಸಬೇಕು. ಪ್ರತಿ ವಾರ್ಡ್ನಲ್ಲಿ ತರಕಾರಿ, ದಿನಸಿ ಇತ್ಯಾದಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿರುವಾಗ ಮುಖ್ಯ ರಸ್ತೆಗೆ ಸಾರ್ವಜನಿಕರು ಬರುವ ಅಗತ್ಯವಿರುವುದಿಲ್ಲ. ಆದರೆ ಕೆಲವರು ಅನಾವಶ್ಯಕವಾಗಿ ರಸ್ತೆಗೆ ಇಳಿಯುತ್ತಿದ್ದು, ಅಂತವರನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಕರೋನಾ ವೈರಸ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜ್ವರ ಮತ್ತಿತರ ಕರೋನಾ ಲಕ್ಷಣಗಳುಳ್ಳ ರೋಗಗಳ ಚಿಕಿತ್ಸೆಗಾಗಿ ತಾಲೂಕು ಮಟ್ಟದಲ್ಲಿ ಒಂದು ಆಸ್ಪತ್ರೆಯನ್ನು ಗುರುತಿಸಬೇಕು. ಭದ್ರಾವತಿ ನಗರದಲ್ಲಿ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆಯನ್ನು ಒದಗಿಸಲು ಸೂಕ್ತ ಸೌಲಭ್ಯಗಳಿರುವ ಆಸ್ಪತ್ರೆಗಳನ್ನು ಗುರುತಿಸಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಆರೋಗ್ಯ ಸೇವೆಯನ್ನು ಪಡೆಯಲು ಸಂಕಷ್ಟ ಅನುಭವಿಸಬಾರದು ಎಂದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಎಪ್ರಿಲ್ ತಿಂಗಳ ಪಡಿತರ ಇನ್ನೆರಡು ದಿನಗಳಲ್ಲಿ ವಿತರಣೆ ಆರಂಭವಾಗಲಿದೆ. ಎಲ್ಲರೂ ಒಂದೇ ಅವಧಿಯಲ್ಲಿ ಪಡಿತರ ಕೊಳ್ಳಲು ಹೊರಗೆ ಬಂದರೆ ಜನಸಂದಣಿಯಾಗುವ ಸಾಧ್ಯತೆಯಿದೆ. ಆದ್ದರಿಂದ ಪಡಿತರದಾರರಿಗೆ ಟೋಕನ್ ವಿತರಿಸಿ ನಿಗದಿತ ದಿನದಂದು ಬಂದು ಪಡಿತರ ಖರೀದಿಸಲು ವ್ಯವಸ್ಥೆ ಮಾಡಬೇಕು. ಇದೇ ರೀತಿ ಬಿಸಿಯೂಟದ ಅಕ್ಕಿಯನ್ನು ವಿದ್ಯಾರ್ಥಿಗಳಿಗೆ ಸುಗಮವಾಗಿ, ಯಾವುದೇ ಗೊಂದಲವಾಗದಂತೆ ತಲುಪಿಸಲು ಸಹ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಉಪ ವಿಭಾಗಾಧಿಕಾರಿ ಪ್ರಕಾಶ್ ಅವರು ಮಾಹಿತಿ ನೀಡಿ, ಪ್ರತಿ ದಿನ ಅಗತ್ಯ ವಸ್ತುಗಳನ್ನು ಕೊಳ್ಳಲು ಬೆಳಿಗ್ಗೆ 9ರಿಂದ 2ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ತಳ್ಳುಗಾಡಿ ಮೂಲಕ ವಾರ್ಡ್ವಾರು ತರಕಾರಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗಿದೆ. ತಾಲೂಕಿನಲ್ಲಿ ಹೊರಗಿನಿಂದ ಬಂದವರನ್ನು ಕ್ವಾರೆಂಟೈನ್ನಲ್ಲಿರಿಸಿ ನಿರಂತರ ನಿಗಾ ವಹಿಸಲಾಗುತ್ತಿದೆ ಎಂದರು.
ಶಾಸಕ ಬಿ.ಕೆ. ಸಂಗಮೇಶ್ವರ, ಅಶೋಕ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ. ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Get in Touch With Us info@kalpa.news Whatsapp: 9481252093
Discussion about this post