ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂದಿನ 20 ದಿನಗಳ ಒಳಗಾಗಿ ನಗರ ರೈಲು ನಿಲ್ದಾಣ #RailwayStation ಹಾಗೂ ಬಸ್ ನಿಲ್ದಾಣದ #BusTerminal ಬಳಿಯಲ್ಲಿ ಪ್ರೀಪೇಯ್ಡ್ ಆಟೋ ಕೌಂಟರ್ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆರ್’ಟಿಒ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಏರ್ಪಡಿಸಲಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೊದಲನೇ ಹಂತದಲ್ಲಿ ರೈಲ್ವೇ ನಿಲ್ದಾಣ ಮತ್ತು ಬಸ್ ನಿಲ್ದಾಣದಲ್ಲಿ ಇನ್ನು 20 ದಿನಗಳ ಒಳಗೆ ಆಟೋರಿಕ್ಷಾ ಪ್ರಿ-ಪೇಯ್ಡ್ ಕೌಂಟರ್’ಗಳನ್ನು #PrepaidAutoCounter ತೆರೆಯಬೇಕು ಎಂದು ಸೂಚಿಸಿದರು.
ಬಸ್ ಸಂಚಾರ ಆರಂಭಕ್ಕೆ ಸೂಚನೆ
ರೈಲು ನಿಲ್ದಾಣದಿಂದ ಬಸ್ ನಿಲ್ದಾಣ ಕಡೆ ತೆರಳಲು ಸರ್ಕಾರಿ ಬಸ್ ಕಾರ್ಯಾಚರಣೆಯನ್ನು 10 ದಿನಗಳ ಒಳಗೆ ಆರಂಭಿಸಬೇಕೆಂದು ಕೆಎಸ್’ಆರ್ಟಿಸಿ #KSRTC ಡಿಸಿ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಬಸ್ ನಿಲ್ದಾಣ ಸ್ಥಳ ನಿಗದಿ ಕುರಿತು ಆರ್ಟಿಓ, #RTO ಆಟೋ, ಬಸ್ ಚಾಲಕರ ಸಂಘ, ಟ್ರಾಫಿಕ್ ಪೊಲೀಸ್, #TrafficPolice ಕೆಎಸ್’ಆರ್ಟಿಸಿ ಯವರು ಸರ್ವೇ ಮಾಡಿ ನಿಗದಿಪಡಿಸುವಂತೆ ಸೂಚನೆ ನೀಡಿದರು.
ಇನ್ನು, ಸಹ್ಯಾದ್ರಿ ಕಾಲೇಜು ಬಳಿಯ ಕೆಇಬಿ #KEB ವೃತ್ತದಲ್ಲಿ ಬಸ್ ಕಾಯುವವರ ಸಂಖ್ಯೆ ಹೆಚ್ಚಿದ್ದು, ಒಂದು ಬಸ್ ಶೆಲ್ಟರ್ ಸ್ಥಾಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕರು ಮನವಿ ಮಾಡಿದರು.
ನಾಗರೀಕರಾದ ಡಾ.ಶ್ರೀನಿವಾಸ್ ಅವರು ಮಾತನಾಡಿ, ರೈಲ್ವೇ ನಿಲ್ದಾಣದಲ್ಲಿ ಆಟೋ ಪಾಥ್ ಇದ್ದರೂ ಅಲ್ಲಿ ನಿಲುಗಡೆ ಮಾಡುತ್ತಿಲ್ಲ. ಬದಲಾಗಿ ಒಂದೆಡೆ ಆಟೋಗಳನ್ನು ಗುಡ್ಡೆ ಹಾಕಿಕೊಳ್ಳುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೆ ಕಷ್ಟವಾಗಿದೆ ಎಂದರು.
ಹಾಗೆಯೇ ಬಸ್ಸು, ಲಾರಿ ಇತರೆ ವಾಹನಗಳು ಜೋರಾಗಿ ಹಾರ್ನ್ ಮಾಡುತ್ತಿರುವುದರಿಂದ ಕೆಲವು ರಸ್ತೆಗಳಲ್ಲಿ ಅತ್ಯಂತ ಶಬ್ದ ಮಾಲಿನ್ಯ ಉಂಟಾಗುತ್ತಿದೆ ಎಂದು ದೂರಿದರು.
ಮತ್ತೋರ್ವರು ಮಾತನಾಡಿ, ಬೆಳಗಿನ ಜಾವ 5 ರ ನಂತರ ಸಹ ಆಟೋದವರು 1 ಅರ್ಧ ಚಾರ್ಜ್ ಮಾಡುತ್ತಿದ್ದಾರೆ. ಮೀಟರ್ ಸಹ ಹಾಕುವುದಿಲ್ಲವೆಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಹೀಗೆ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಆಟೋ ನಿಲ್ಲಿಸಿದ ಚಾಲಕರಿಗೆ ಸರ್ಕಲ್ ಇನ್ಸ್’ಪೆಕ್ಟರ್ ದಂಡ ವಿಧಿಸಬೇಕು. ಜೋರಾಗಿ ಹಾರ್ನ್ ಕಂಡುಬಂದಲ್ಲಿ ಪೊಲೀಸ್ ಠಾಣೆಯ ಸಂಖ್ಯೆಗೆ ಒಂದು ದೂರು ಸಲ್ಲಿಸಿದಲ್ಲಿ ಕ್ರಮ ವಹಿಸಲಾಗುವುದು ಎಂದರು.
ಆಟೋಗಳಲ್ಲಿ ಮೀಟರ್ ಹಾಕಬೇಕು. ಹಾಗೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಮಾತ್ರ ಒಂದೂ ಅರ್ಧ ಚಾರ್ಜ್ ತೆಗೆದುಕೊಳ್ಳಬೇಕು. ನಂತರ ತೆಗೆದುಕೊಳ್ಳುವ ಹಾಗಿಲ್ಲ. ಈ ಸಮಯ ಮತ್ತು ದರದ ಕುರಿತು ರೈಲ್ವೆ ನಿಲ್ದಾಣದ ಬಳಿ ಸಾರ್ವಜನಿಕರ ಅನುಕೂಲಕ್ಕಾಗಿ ಒಂದು ಬೋರ್ಡ್ ಬರೆಸಿ ಹಾಕಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಪೊಲೀಸ್ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಬಿ. ಶಂಕ್ರಪ್ಪ, ಕೆಎಸ್’ಆರ್’ಟಿಸಿ ಡಿಸಿ ವಿಜಯಕುಮಾರ್, ಸರ್ಕಲ್ ಇನ್ಸ್’ಪೆಕ್ಟರ್ ಸಂತೋಷ್ ಸೇರಿದಂತೆ ಅಧಿಕಾರಿಗಳು, ನಾಗರಿಕ ಹಿತ ರಕ್ಷಣಾ ವೇದಿಕೆಯ ವಸಂತಕುಮಾರ್, ಇತರೆ ಪದಾಧಿಕಾರಿಗಳು, ಆಟೋ ಚಾಲಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಮಾಲೀಕರ ಸಂಘದವರು, ಇತರರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















