ಕಲ್ಪ ಮೀಡಿಯಾ ಹೌಸ್ | ರಾಮನಗರ |
ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ DKShivakumar ಅವರ ವಿರುದ್ಧ ಹರಿಹಾಯ್ದರು.
ಬಿಡದಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, 2018 ಸರ್ಕಾರ ಹೋಗಿದ್ದು ಡಿ.ಕೆ. ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕೋಟೆ ಕಟ್ಟಿ ಮೆರೆದೋರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ 2ರಿಂದ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಬೇಕು. ಅದಕ್ಕೆ ನೀವೆಲ್ಲರೂ ಶ್ರಮ ಹಾಕಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಈ ಮೈತ್ರಿಕೂಟದ ಮೂಲಕ ಇಡೀ ರಾಜ್ಯಕ್ಕೆ ದೇಶಕ್ಕೆ ನಾವು ಒಳ್ಳೆಯ ಸಂದೇಶ ಕೊಡಬೇಕು ಎಂದರು.

ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ ಅಭ್ಯರ್ಥಿ ಆಗುವುದೇ ಅನುಮಾನ, ಏನು ಆಗುತ್ತದೆ ಎನ್ನುವುದು ನನಗೆ ಗೊತ್ತಿದೆ ಎಂದು ಡಿಕೆಶಿ ಮೇಲೆ ವಾಗ್ದಾಳಿ ನಡೆಸಿದರು.

Also read: ರಾಗಿಗುಡ್ಡ ಗಲಭೆ | ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಮಾಜಿ ಪಿಎಂ ದೇವೇಗೌಡ ಹೇಳಿದ್ದೇನು?
ಶಾಮನೂರು ಶಿವಶಂಕರಪ್ಪನವರು ಧೈರ್ಯವಾಗಿ ಮಾತನಾಡಿದ್ದಾರೆ
ವೀರಶೈವ ಲಿಂಗಾಯತರಿಗೆ ಎಷ್ಟು ಸ್ಥಾನ ಕೊಟ್ಟಿದ್ದೇವೆ ಎಂದು ಸಂಖ್ಯೆ ಹೇಳುವುದಲ್ಲ, ಯಾವ ಸ್ಥಾನ ಕೊಟ್ಟಿದ್ದೀರಿ ಎನ್ನುವುದು ಮುಖ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಹಲವಾರು ಸಮುದಾಯಗಳಿಗೂ ಪರಿಸ್ಥಿತಿ ಏನಾಗಿದೆ ಎನ್ನುವುದು ಗೊತ್ತಿದೆ. ಆ ಮಾನದಂಡ ಏನಿದೆ ಎಂಬುದು ಕೂಡ ನನಗೆ ಗೊತ್ತಿದೆ. ಅಧಿಕಾರಿಗಳು ಮತ್ತು ನೌಕರರ ವರ್ಗದವರಲ್ಲಿ ಅಸಮಾಧಾನ ಇದೆ. ಇದು ಚುನಾವಣೆಯ ಸಂದರ್ಭದಲ್ಲಿ ಸ್ಫೋಟಗೊಳ್ಳಲಿದೆ ಎಂದು ಅವರು ತಿಳಿಸಿದರು
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post