ಕಲ್ಪ ಮೀಡಿಯಾ ಹೌಸ್ | ರಿಪ್ಪನ್ಪೇಟೆ |
ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆದಿರುವ ಬೆಳವಣಿಗೆಯೊಂದರಲ್ಲಿ ರಿಪ್ಪನ್ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು.
ನಿರೂಪ್ ಕುಮಾರ್ ಅವರು ರಾಜಕೀಯ ಜೀವನವನ್ನು ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಘಟಕದ ಮೂಲಕ ಪ್ರಾರಂಭಿಸಿದ್ದರು. ಅವರು ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟನಾ ಮಟ್ಟದಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಕಾರ್ಯನಿರ್ವಹಿಸಿದ “ರಾಷ್ಟ್ರಭಕ್ತರ ಬಳಗ” ದೊಂದಿಗೆ ಅವರು ಗುರುತಿಸಿಕೊಂಡಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಸ್ಥಳೀಯ ಮಟ್ಟದ ರಾಜಕೀಯ ವಾತಾವರಣ ಬದಲಾಗುತ್ತಿದ್ದು, ಕಾಂಗ್ರೆಸ್ ಪಕ್ಷವು ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲು ಮುಂದಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ಜನಸಂಪರ್ಕ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಗಮನಾರ್ಹ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ನಾಯಕತ್ವ ನಿರೂಪ್ ಕುಮಾರ್ ಅವರನ್ನು ಆಕರ್ಷಿಸಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸೇರ್ಪಡೆ ಸಂಧರ್ಭದಲ್ಲಿ ತಾಪಂ ಮಾಜಿ ಸದಸ್ಯ ಚಂದ್ರೇಶ್ ಎನ್ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಗ್ರಾಪಂ ಸದಸ್ಯರಾದ ಮಧುಸೂದನ್ , ಪ್ರಕಾಶ್ ಪಾಲೇಕರ್ , ರಿಪ್ಪನ್ ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ , ಮುಖಂಡರಾದ ಈಶ್ವರಪ್ಪ ಗೌಡ , ನೇಮಣ್ಣ ಬಂಡಿ ಹಾಗೂ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post