ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮಗೆ ಸೇರಿದ ಕೃಷಿಭೂಮಿಯಲ್ಲಿ ಬೆಳೆದಿದ್ದ ಫಸಲನ್ನು ಒತ್ತುವರಿ ತೆರವು #Clearing encroachments ಹೆಸರಿನಲ್ಲಿ ನಾಶಗೊಳಿಸಿದ್ದಾರೆ ಎಂದು ತಾಲ್ಲೂಕಿನ ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದೂರು ಗ್ರಾಮದ ಡಾಕಪ್ಪ ಎಂಬುವವರು ಆನಂದಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಗ್ರಾಮದ ಸ.ನಂ.66ರಲ್ಲಿರುವ ಮೂರು ಎಕರೆ ಕೃಷಿ ಭೂಮಿಗೆ ಸಂಬಂಧಿಸಿದಂತೆ ಬಗರ್ ಹುಕುಂ ಕಾಯ್ದೆಯಡಿ ಹಕ್ಕು ಪತ್ರ ನೀಡಲಾಗಿದೆ. ಹಲವು ವರ್ಷಗಳಿಂದ ನಮ್ಮ ಕುಟುಂಬ ಸದರಿ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ಜ. 23ರಂದು ಅರಣ್ಯ ಇಲಾಖೆ ಅಧಿಕಾರಿಗಳು ಕೃಷಿ ಭೂಮಿ ತೆರವುಗೊಳಿಸಬೇಕು ಎಂದು ಮಾಹಿತಿ ನೀಡಿ ಮರು ದಿನವೆ ಕಾರ್ಯಾಚರಣೆ ನಡೆಸಿದ್ದಾರೆ. ಫಸಲಿಗೆ ಬಂದ ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದ್ದಾರೆ. ಇದರಿಂದ ಸುಮಾರು 10 ಲಕ್ಷ ನಷ್ಟ ಉಂಟಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















