ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ (60) #DSudhakar ಅವರು ಇಂದು ವಿಧಿವಶರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ #Bengaluru ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಳೆದ ಒಂದು ತಿಂಗಳಿನಿಂದ ಮೃತ್ಯುವಿನೊಂದಿಗೆ ಹೋರಾಡುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:15ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ಪ್ರಕಟಿಸಿವೆ.
ಸಚಿವ ಸುಧಾಕರ್ ಅವರು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಮೊದಲು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದಂತೆ ಕಂಡರೂ, ತದನಂತರ ಅವರ ಶ್ವಾಸಕೋಶದಲ್ಲಿ ತೀವ್ರ ಸ್ವರೂಪದ ಸೋಂಕು ಕಾಣಿಸಿಕೊಂಡಿತು. ಇದರಿಂದಾಗಿ ಅವರ ಆರೋಗ್ಯ ಸ್ಥಿತಿ ಕ್ಷಣಕ್ಷಣಕ್ಕೂ ಕ್ಷೀಣಿಸಿ ಚಿಂತಾಜನಕವಾಯಿತು.ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಜೀವದಾಯಕ ವ್ಯವಸ್ಥೆಯಲ್ಲಿದ್ದ ಅವರಿಗೆ ತಜ್ಞ ವೈದ್ಯರ ತಂಡ ನಿರಂತರ ಚಿಕಿತ್ಸೆ ನೀಡುತ್ತಿತ್ತು. ಆದರೆ, ಇಂದು ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು.
ಸಚಿವ ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ವಲಯದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ. #Chitradurga ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಕ್ರಿಯರಾಗಿದ್ದ ಸಚಿವರನ್ನು ಕಳೆದುಕೊಂಡ ಜಿಲ್ಲೆಯ ಜನತೆ ಕಂಬನಿ ಮಿಡಿದಿದ್ದಾರೆ. ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸುಧಾಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇಂದು ಮಧ್ಯಾನ್ಹ 12 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ವೇಳೆಗೆ ಚಳ್ಳಕೆರೆಯ #Challakere ಕ್ರೀಡಾಂಗಣದಲ್ಲಿ ಸುಧಾಕರ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ. ಹಿರಿಯೂರು ಹಾಗೂ ಚಳ್ಳಕೆರೆಯಲ್ಲಿ ನೀರವ ಮೌನ ಆವರಿಸಿದೆ.
ಸಚಿವ ಡಿ. ಸುಧಾಕರ್ ಅವರು 1961 ಮಾರ್ಚ್28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಇವರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪೂರೈಸುವ ಮೂಲಕ ಮುಗಿಸಿದರು.
ವೃತ್ತಿಜೀವನದಲ್ಲಿ ತಂದೆಯಿಂದ ಬಳುವಳಿಯಾಗಿ ಬಂದಿದ್ದ ಕೃಷಿ ಮತ್ತು ಲಿಕ್ಕರ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಇವರು, ನಂತರ ರಾಜಕೀಯದತ್ತ ಆಕರ್ಷಿತರಾದರು. ಮಾಜಿ ಶಾಸಕ ಎನ್. ಜಯಣ್ಣ ಅವರಿಂದ ರಾಜಕೀಯ ಕಲಿತ ಸುಧಾಕರ್, ಹಂತ ಹಂತವಾಗಿ ಬೆಳೆದು ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗುರುತಿಸಿಕೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















