ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಗಣಿತಶಾಸ್ತ್ರ ಮತ್ತು ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಜೆ. ಗಿರೀಶ್ ಅವರು ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸರ್ ಸಿ. ವಿ. ರಾಮನ್ ಯುವ ವಿಜ್ಞಾನಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯು ಈ ಕುರಿತು ಅಧಿಕೃತವಾಗಿ ಇ-ಮೇಲ್ ಮೂಲಕ ಮಾಹಿತಿ ನೀಡಿದ್ದು ಭೌತಿಕ ವಿಜ್ಞಾನ ಕ್ಷೇತ್ರದ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಕರ್ನಾಟಕ ಸರ್ಕಾರ 2020ನೇ ಸಾಲಿನ ಸರ್. ಸಿ. ವಿ. ರಾಮನ್ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಬರುವ ಮಾರ್ಚ್ 23ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (IISc) ಯ ಜೆ ಎನ್ ಟಾಟಾ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಶಸ್ತಿ ವಿತರಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಸಿ. ಎನ್. ಅಶ್ವತ್ಥ್ ನಾರಾಯಣ, ಪ್ರೊ. ಸಿ. ಎನ್. ಆರ್. ರಾವ್ ಭಾಗವಹಿಸಲಿದ್ದಾರೆ.
ಡಾ. ಗಿರೀಶ್ ಅವರು ಕಳೆದ ಹಲವು ವರ್ಷಗಳಿಂದ ರಾಜ್ಯದ ಮಂಚೂಣಿಯ ಸಂಶೋಧಕರಾಗಿ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾನದಂಡಗಳಲ್ಲಿ ಗುರುತಿಸಲ್ಪಟ್ಟಿದ್ದಾರೆ. ಈಗ ಅವರ ಸಾಧನೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸದ ವಿಚಾರ. ಇದು ವಿಶ್ವವಿದ್ಯಾಲಯದ ಇತರೆ ಅಧ್ಯಾಪಕರಿಗೆ ಸ್ಫೂರ್ತಿಯಾಗಲಿ ಎಂದು ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















