ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ಮಗುವಿನ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಅವು ಸಹಾಯ ಮಾಡುತ್ತವೆಂದು ಕೆಂಗಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಬಿ.ವಿ. ನೇತ್ರಾವತಿ ತಿಳಿಸಿದರು.
ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಭವಾನಿ ರಾವ್ ಕೇರಿಯ ಮೈತ್ರಿ ಬಾಲವಿಕಾಸ ಶಾಲೆಯ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಮಗುವಿನ ಆತ್ಮವಿಶ್ವಾಸ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳು ಸುಧಾರಿಸುತ್ತವೆ. ಇದು ಅವರ ಆಸಕ್ತಿಗಳು ಮತ್ತು ಉತ್ಸಾಹಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಸುಸಂಗತ ವ್ಯಕ್ತಿಯ ಬೆಳವಣಿಗೆಗೆ ಕಾರಣವಾಗುತ್ತದೆ. ಇಂದು ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಹೆಚ್ಚಾಗಿ ಬಳಸುವುದರಿಂದ ಅವರ ಕಲಿಕೆಯಲ್ಲಿ ಹಿನ್ನೆಡೆ ಆಗುತ್ತಿದ್ದು ಅದರ ಜೊತೆಗೆ ಅವರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಪೋಷಕರು ಸಹ ಮಕ್ಕಳ ಜೊತೆ ಇರುವಾಗ ಮೊಬೈಲ್ ನ್ನು ಬಳಸಿದ ಮಕ್ಕಳಿಗೆ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಬೇಕು. ಮಕ್ಕಳಿಗೆ ಶಾಲಾ ವಾತಾವರಣದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಪಠ್ಯೇತರ ಚಟುವಟಿಕೆಗಳು ಅತೀ ಹೆಚ್ಚು ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಇಂದು ಹಮ್ಮಿಕೊಂಡಿರುವ ಈ ರಸಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಸಬಾ 2ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಗಣೇಶ್.ಎಸ್ ರವರು ವಿದ್ಯಾರ್ಥಿಗಳು ಏಕಾಗ್ರತೆಗೆ ಮಾರಕವಾಗಿರುವ ಮೊಬೈಲ್ ಬಳಕೆಯಿಂದ ದೂರವಿದ್ದು, ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯೆ ಕಲಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮೊಬೈಲ್ ಬಳಕೆಯು ಒಂದು ವ್ಯಸನವಾಗಿದೆ. ಅದರಿಂದ ಹೊರಬರಬೇಕು. ಈ ರೀತಿಯ ರಸಪ್ರಶ್ನೆ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪಠ್ಯದ ಹೊರಗೆ ಇರುವ ಕಲಿಕಾಂಶಗಳ ಪರಿಚಯ ಮಾಡಿಸುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರ್ಯಕ್ರಮದ ಅತಿಥಿಗಳು ಮತ್ತು ಶಾಲಾ ಪೋಷಕರಾದ ವಿಠಲ್ ರಾವ್ ರವರು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಸಪ್ರಶ್ನೆ ಕಾರ್ಯಕ್ರಮವು ಜ್ಞಾನವನ್ನು ಹೆಚ್ಚಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಉತ್ತೇಜಿಸಲು ಮತ್ತು ಶೈಕ್ಷಣಿಕ ಸ್ಪರ್ಧೆಯನ್ನು ಬೆಳೆಸಲು ಪ್ರಮುಖ ಸಾಧನಗಳಾಗಿವೆ. ಶಾಲಾ ಹಂತದಲ್ಲಿ ಏರ್ಪಡಿಸಲಾದ ಈ ಕಾರ್ಯಕ್ರಮ ವಿದ್ಯಾರ್ಥಿಗಳ ಮುಂದಿನ ಹಂತದಲ್ಲಿ ಅವರನ್ನು ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಪ್ರಾಂಶುಪಾಲ ವಿಶ್ವನಾಥ ಮಾತನಾಡಿ, ಶಿಕ್ಷಕರ ಅವಿರತ ಪರಿಶ್ರಮದಿಂದ ವಿದ್ಯಾರ್ಥಿಗಳು ಉತ್ತಮವಾಗಿ ಕಲಿಯಲು ಕಾರಣವಾಗಿದೆ.ತರಗತಿಯ ನಾಲ್ಕು ಗೋಡೆಯ ಮಧ್ಯೆ ಕಲಿತ ಜ್ಞಾನವನ್ನು ಪರೀಕ್ಷಿಸಲು ಈ ರೀತಿಯ ರಸಪ್ರಶ್ನೆ ಕಾರ್ಯಕ್ರಮಗಳನ್ನು ಶಾಲಾ ಹಂತದಲ್ಲಿ ಏರ್ಪಡಿಸಲಾಗಿದೆ.ಇದರಿಂದ ಪೋಷಕರು ತಮ್ಮ ಮಕ್ಕಳ ಕಲಿಕಾ ಹಂತವನ್ನು ಕಂಡು ಸಂತೋಷ ಪಡುತ್ತಾರೆ ಎಂದು ತಿಳಿಸಿದರು.
ಶಾಲಾ ಶಿಕ್ಷಕಿ ವಿದ್ಯಾ ಕೋರಿಶೆಟ್ಟರ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರಿ ಮುಖ್ಯ ಶಿಕ್ಷಕ ಪ್ರಶಾಂತ ಕುಬಸದ, ಶಾಲಾ ಶಿಕ್ಷಕರಾದ ವಿಜಯಲಕ್ಷ್ಮೀ, ಮಂಜುಳಾ ಪಾಟೀಲ್ ಮತ್ತು ಇತರೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅನಿಕೇತ, ಅಮೃತ, ಬಿಂದು, ಮಾನ್ವಿತಾ, ಅಮೃತ, ವಚನ, ಜನನಿ, ಮಂಕುತಿಮ್ಮನ ಕಗ್ಗ ಮತ್ತು ಪ್ರಭಾವಿ ಕಬೀರ್ ದೋಹೆ ಹೇಳಿದರು.
ಯುಕೆಜಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ಮಮತಾ ಸ್ವಾಗತಿಸಿ, ಲಕ್ಷ್ಮಿ ವಂದಿಸಿ, ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















