ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಹಲವು ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಭರ್ಜರಿ ಬೇಟೆ ನಡೆಸಿರುವ ಜಿಲ್ಲಾ ಪೊಲೀಸರು, 11 ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತೀರ್ಥಹಳ್ಳಿ, ಮಾಳೂರು, ಆಗುಂಬೆ, ಆನವಟ್ಟಿ ಮತ್ತು ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ, ಸರ್ಕಾರದಿಂದ ಪರವಾನಿಗೆ ಪಡೆಯದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಸಂಬಂಧಪಟ್ಟ ಠಾಣಾ ಪಿಎಐ ಅವರುಗಳು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ 11 ಜನ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯ್ದೆಯಡಿ ಒಟ್ಟು 11 ಪ್ರಕರಣಗಳನ್ನು ದಾಖಸಿ, ಸುಮಾರು ರೂ 11,535 ಮೌಲ್ಯದ 30.45 ಲೀಟರ್ ಮದ್ಯ ವಶಪಡಿಸಿಕೊಂಡಿದೆ ಎಂದಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 4 ಪ್ರಕರಣಗಳಲ್ಲಿ 4 ಜನ ಆರೋಪಿಗಳನ್ನು ದಸ್ತಗಿರಿ ಮಾಡಿಕೊಂಡಿದ್ದು, ರೂ. 3,538 ಅಂದಾಜು ಮೌಲ್ಯದ 8.46 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ 4 ಪ್ರಕರಣಗಳಲ್ಲಿ 4 ಜನ ಆರೋಪಿಗಳನ್ನು ದಸ್ತಗಿರಿ ಮಾಡಿಕೊಂಡಿದ್ದು, ರೂ. 3,938 ಅಂದಾಜು ಮೌಲ್ಯದ 10.65 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ 1 ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿಕೊಂಡಿದ್ದು, ರೂ.1,118 ಅಂದಾಜು ಮೌಲ್ಯದ 2.52 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯ 1 ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು, ರೂ. 2,820 ಅಂದಾಜು ಮೌಲ್ಯದ 8.46 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿಕೊಂಡಿದ್ದು, ರೂ. 121 ಅಂದಾಜು ಮೌಲ್ಯದ 0.36 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ.
Get in Touch With Us info@kalpa.news Whatsapp: 9481252093
Discussion about this post