ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಕ್ತಿಧಾಮ-2 ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೋಟೆ ಗಂಗೂರು ವಾಸಿ ಸಚಿನ್ ಆಲಿಯಾಸ್ ಶ್ಯಾಡೋ (24) ಶಿವಮೊಗ್ಗ ನಿವಾಸಿ ಸತೀಶ ಆಲಿಯಾಸ್ ಬುಡ್ಡ ಸತೀಶ (29) ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಟ್ಟು 420 ಗ್ರಾಂ ತೂಕದ ಮಾದಕ ವಸ್ತು ಹಾಗೂ ಗಾಂಜಾ ಮಾರಾಟ ಮಾಡಿ ಗಳಿಸಿದ 800ರ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆ ರೀತ್ಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಶಿವಮೊಗ್ಗ ಉಪವಿಭಾಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ಹಾಗೂ ಶಿವಮೊಗ್ಗ ಗ್ರಾಮಾಂತರ ವೃತ್ತ ಸಿಪಿಐ ಸಂಜೀವ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ ಯಶವಂತಕುಮಾರ್ ಹಾಗೂ ಸಿಪಿಸಿ ಮಂಜುನಾಥ, ಮಂಜುನಾಥ, ಧನ್ಯಾನಾಯ್ಕ ಮತ್ತು ಕಲ್ಮೇಶ ಅವರ ತಂಡ ಈ ಕಾರ್ಯಾಚರಣೆ ನಡೆಸಿತು ಎನ್ನಲಾಗಿದೆ.

ಮಾದಕ ವಸ್ತು ಗಾಂಜಾ ಮಾರಾಟದ ಬಗ್ಗೆ ಸಾರ್ವಜನಿಕರು ಶಿವಮೊಗ್ಗ ಜಿಲ್ಲಾ ಪೊಲೀಸ್ ದೂ: 9480803301ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















