ಶಿವಮೊಗ್ಗ: ಈ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.
ಎಸ್’ಎಸ್’ಎಲ್’ಸಿ ಪರೀಕ್ಷೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್’ಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.
ಎಸ್’ಎಸ್’ಎಲ್’ಸಿ ಪರೀಕ್ಷೆ ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಬೆಳಿಗ್ಗೆ 9.30ರಿಂದ 12.30ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 24ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ, ಶಿಸ್ತು, ಸಮಯ ಪಾಲನೆ ಹಾಗೂ ಗೊಂದಲಗಳಿಗೆ ಅವಕಾಶವಾಗದಂತೆ ನಡೆಯಲು ಪೂರ್ವಸಿದ್ಧತೆಗಳನ್ನು ಮಾಡಬೇಕು ಎಂದವರು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಶೌಚಾಲಯ, ನೀರಿನ ವ್ಯವಸ್ಥೆ, ಅಗತ್ಯ ಪೀಠೋಪಕರಣಗಳು ಇರಬೇಕು. ಪ್ರವೇಶ ಪತ್ರಗಳನ್ನು ಬಿಟ್ಟು ಬಂದಲ್ಲಿ ಆನ್’ಲೈನ್ ಅಥವಾ ಇನ್ನೊಂದು ಪ್ರತಿಯ ವ್ಯವಸ್ಥೆಯನ್ನು ಶಾಲಾ ವತಿಯಿಂದ ಮುಂಚಿತವಾಗಿಯೆ ತಲುಪಿಸುವ ವ್ಯವಸ್ಥೆ ಮಾಡಿರಬೇಕು ಈ ಕುರಿತಂತೆ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರ ಪೂರ್ವಭಾವಿ ಸಭೆಯನ್ನು ಆಯೋಜಿಸಿ ಸೂಚನೆಗಳನ್ನು ನೀಡಬೇಕು ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿರಬೇಕು ಹಾಗೂ ಅದು ಕಾರ್ಯ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಸಿಸಿ ಕ್ಯಾಮೆರಾ ಅಳವಡಿಸದಿದ್ದಲ್ಲಿ ಪ್ರಶ್ನೆ ಪತ್ರಿಕೆಯನ್ನು ಲಕೋಟೆಯಿಂದ ಹೊರತೆಗೆಯುವಾಗ ಮೊಬೈಲ್’ನ ಚಿತ್ರಿಕರಿಸಬೇಕು. ಸಿಸಿ ಟಿವಿಯ ದೃಶ್ಯಾವಳಿಗಳನ್ನು ಆನ್’ಲೈನ್ ಮೂಲಕ ಮೊಬೈಲ್’ನಲ್ಲಿ ನೋಡುವಂತಹ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಡಬೇಕು. ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆದರೆ ಕೇಂದ್ರದ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿವಿಧ ಇಲಾಖೆಗಳಿಂದ ಗ್ರೂಪ್ ಬಿ ಸಿಬ್ಬಂದಿಗಳನ್ನು ಮಾರ್ಗಾಧಿಕಾರಿ ಹಾಗೂ ಸ್ವಾಡ್’ಗಳಾಗಿ ನೇಮಿಸಿಕೊಳ್ಳಬೇಕು. ಪರೀಕ್ಷೆಯ ಆರಂಭದ ನಂತರ ಯಾವುದೇ ಮಾಧ್ಯಮ ವರದಿಗಾರರು ಹಾಗೂ ವೀಡಿಯೋ ಗ್ರಾಫರ್’ನ್ನು ಕೊಠಡಿಯ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿರುತ್ತದೆ. ಈ ಕುರಿತು ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಒಳಪ್ರವೇಶಿಸಲು ಅವಕಾಶ ನೀಡಬಾರದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಶಿವರಾಮೇಗೌಡ, ಡಿಡಿಪಿಐ ಸುಮಂಗಳಾ ಕುಚಿನಾಡ ಮತ್ತಿತರರು ಉಪಸ್ಥಿತರಿದ್ದರು.
(ವರದಿ: ಡಾ. ಸುಧೀಂದ್ರ)
Discussion about this post