ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ಕೋವಿಡ್ 19 ಪರಿಣಾಮವಾಗಿ ಬಡ ಮತ್ತು ಮಧ್ಯಮ ವರ್ಗದವರ ಕುಟುಂಬ ನಿರ್ವಹಣೆ ಸಂಕಷ್ಟಕ್ಕೀಡಾಗಿದ್ದು, ಅವರ ಬದುಕಿಗೆ ಆಸರೆಯಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎಚ್.ಪದ್ಮರಾಜ್ ಜೈನ್ ತಿಳಿಸಿದರು.
ನಗರದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಬಡವರಿಗೆ ಅಗತ್ಯ ವಸ್ತುಗಳ ಆಹಾರದ ಕಿಟ್ ವಿತರಣೆ ಮಾಡಿ ಅವರು ಮಾತನಾಡಿದರು.
ಇಡೀ ದೇಶವೇ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭಗಳಲ್ಲಿ ಗ್ರಾಮೀಣ ಭಾಗದ ಜನತೆ ತಮ್ಮ ಜೀವನ ನಿರ್ವಹಣೆಗೆ ಚಿಂತಿಸಬೇಕಾದ ಪರಿಸ್ಥಿತಿ ಎದುರಾಗಿದೆ. ದೈನಂದಿನ ಕಾರ್ಯಗಳ ಮೇಲೆ ಅವಲಂಭಿಯವಾಗಿದ್ದ ಸಾಕಷ್ಟು ಮಂದಿ ಕಾರ್ಮಿಕರ ಬದುಕು ಬೀದಿಪಾಲಾಗಿದೆ. ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗವು ಜನತೆಯ ಮನೆ ಬಾಗಿಲಿಗೆ ತರಕಾರಿ ಮತ್ತು ಅಗತ್ಯ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡುವ ಪ್ರಯತ್ನವು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸುಮಾರು 120 ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರದ ಕಿಟ್, ಹಾಲಿನ ಟೆಟ್ರಾ ಪ್ಯಾಕ್ ಹಾಗೂ ತರಕಾರಿ ವಿತರಣೆ ಮಾಡಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಶ್ರೀನಾಥ್, ಕೆ.ಸಿ.ನಾಗರಾಜು, ಹನುಮಂತರೆಡ್ಡಿ, ಆದಿ ನಾರಾಯಣಸ್ವಾಮಿ, ಶ್ಯಾಮಣ್ಣ ಸೇರಿದಂತೆ ಇತರರು ಇದ್ದರು.
(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)
Get in Touch With Us info@kalpa.news Whatsapp: 9481252093
Discussion about this post