ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯು ಭೌಗೋಳಿಕವಾಗಿ ಮಾತ್ರವಲ್ಲದೆ ಪ್ರಕರಣಗಳ ವರದಿಯಲ್ಲೂ ಸಹ ದೊಡ್ಡ ಜಿಲ್ಲೆಯಾಗಿದ್ದು ಯಾವುದೇ ಒಂದು ಪ್ರದೇಶದಲ್ಲಿ ಜರುಗುವ ಅಪರಾಧ ಕೃತ್ಯಗಳು ಇತರೆ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ಆದ್ದರಿಂದ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚುವಲ್ಲಿ ಮತ್ತು ಮಟ್ಟ ಹಾಕುವಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕೆಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ ಹೇಳಿದರು.
ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಪೊಲೀಸ್ ಗೌರವ ವಂದನೆಗಳನ್ನು ಸ್ವೀಕರಿಸಿ ಅನಂತರ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಪೊಲೀಸ್ ನಿರೀಕ್ಷಕರ ಮೇಲ್ಪಟ್ಟ ಅಧಿಕಾರಿಗಳಿಗೆ ವಿಮರ್ಶನ ಸಭೆಯನ್ನು ನಡೆಸಿದರು.
ಶಿವಮೊಗ್ಗ ಜಿಲ್ಲೆ ಒಂದು ಸೂಕ್ಷ್ಮ ಮತ್ತು ಪ್ರಮುಖವಾದ ಜಿಲ್ಲೆಯಾಗಿದ್ದು ಪೊಲೀಸ್ ಕಾರ್ಯವೈಖರಿಯಿಂದ ಈ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್’ನ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಮಾದಕ ದ್ರವ್ಯದ ಕುರಿತು ತಳಮಟ್ಟದ ಮಾಹಿತಿಯನ್ನು ಸಂಗ್ರಹಿಸಿ ಗಾಂಜಾ ವನ್ನು ಬೆಳೆಯುವವರು, ಸೇವನೆ ಮಾಡುವವರು, ಮಾರಾಟ ಮಾಡುವವರು, ಸಂಗ್ರಹಣೆ ಮಾಡುವವರು ಮತ್ತು ಸಾಗಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿಯ ನಿದ್ರ್ಯಾಕ್ಷಿಣ್ಯ ಕ್ರಮವನ್ನು ಕೈಗೊಳ್ಳಲು ಸೂಚನೆಗಳನ್ನು ನೀಡಿದರು.
ಶಿವಮೊಗ್ಗ ಜಿಲ್ಲೆಯು ರಾಜ್ಯದಲ್ಲಿ ಎಲ್ಲರ ಗಮನವನ್ನು ಸೆಳೆದಿರುವ ಒಂದು ಮುಖ್ಯವಾದ ಜಿಲ್ಲೆಯಾಗಿದ್ದು, ಶಿವಮೊಗ್ಗದಂತಹ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಿದರೆ ಎಲ್ಲಾ ಆಯಾಮದ ಅನುಭವ ದೊರೆಯಲಿದೆ. ಆದ್ದರಿಂದ ಎಲ್ಲರೂ ಶ್ರಮವಹಿಸಿ ಕರ್ತವ್ಯ ನಿರ್ವಹಿಸಿ ಎಂದರು.
ಶಿವಮೊಗ್ಗ ಜಿಲ್ಲೆಯು ದೊಡ್ಡ ಜಿಲ್ಲೆಯಾದ ಕಾರಣ ಎಲ್ಲಾ ರೀತಿಯ ಪೊಲೀಸ್ ಘಟಕಗಳು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೀವು ನಿರ್ವಹಿಸುವ ಕಾರ್ಯದಿಂದ ನಿಮ್ಮ ಯಶಸ್ಸು ಕಾಣುತ್ತದೆ. ಆದ್ದರಿಂದ ಪೊಲೀಸ್ ಇಲಾಖೆಯ ಅಧಿಕಾರಿಯ ಸಿಬ್ಬಂದಿಗಳನ್ನು ಒಳಗೊಂಡು ಎಲ್ಲರೂ ಕರ್ತವ್ಯದಲ್ಲಿ ಬೆರೆತು ಕೆಲಸಮಾಡಿ ಎಂದು ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಸಾಕಷ್ಟು ಸಂಖ್ಯೆಯ ಪೊಲೀಸ್ ಬಲವು ಲಭ್ಯವಿದ್ದು , ಪಾರದರ್ಶಕವಾಗಿ ಮತ್ತು ಜನರ ಸಮಸ್ಯೆಗೆ ಸ್ಪಂದಿಸುವಂತೆ ಸಂಯಮದಿಂದ ವರ್ತಿಸಿ, ಸಾರ್ವಜನಿಕರ ಸೇವೆಗೆ ಸದಾ ಕಾಲ ಲಭ್ಯವಿರಿ. ನಿಮ್ಮ ಶ್ರಮವೇ ನಿಮ್ಮ ಯಶಸ್ಸನ್ನು ತೋರಿಸುತ್ತದೆ. ಪೊಲೀಸ್ ಇಲಾಖೆಯ ಯಶಸ್ಸು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರು ಇಟ್ಟಿರುವಂತಹ ನಂಬಿಕೆಯ ಮೇಲೆ ನಿಂತಿರುತ್ತದೆ ಆದ್ದರಿಂದ ನೀವು ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಕಾನೂನು ವ್ಯಾಪ್ತಿಗೆ ಒಳಪಟ್ಟು ಕರ್ತವ್ಯ ನಿರ್ವಹಿಸಿ ಎಂದರು.
ನೊಂದವರಿಗೆ ನೆರವು ಹಾಗೂ ಅಪರಾಧಿಗೆ ಶಿಕ್ಷೆ ಎಂಬ ತತ್ವದ ಆಧಾರದ ಮೇಲೆ ಕಾರ್ಯನಿರ್ವಹಿಸಿ, ಈ ನಿಟ್ಟಿನಲ್ಲಿ ಉತ್ತಮ ಗುಣಮಟ್ಟದ ತನಿಖೆಯನ್ನು ಕೈಗೊಂಡು ಆರೋಪಿತರಿಗೆ ಶಿಕ್ಷೆಯಾಗುವಲ್ಲಿ ನಿಮ್ಮ ಪಾತ್ರವೂ ಬಹಳ ಮುಖ್ಯ ವಿದ್ದು, ತನಿಖೆಯಲ್ಲಿ ಲೋಪ ಬರದಂತೆ ಕರ್ತವ್ಯ ನಿರ್ವಹಿಸುವುದು ಸೂಕ್ತ. ನೀವು ನಿರ್ವಹಿಸಬೇಕಾದ ಕರ್ತವ್ಯಗಳ ಮೇಲೆ ಶ್ರದ್ಧೆ ಇರುವುದು ಮುಖ್ಯವಿದ್ದು, ನೀವು ಕೈಗೊಳ್ಳುವಂತಹ ಗುಣಮಟ್ಟದ ತನಿಖೆಯಿಂದ ಮಾತ್ರ ಶಿಕ್ಷೆಯ ಪ್ರಮಾಣವು ಹೆಚ್ಚಾಗುತ್ತದೆ, ಆ ಸಂದರ್ಭದಲ್ಲಿ ಗುಂಪುಗಳು ರೌಡಿ ಹಾಗೂ ಗೂಂಡಾ ಆಸಾಮಿ ಗಳಿಗೆ ಶಿಕ್ಷೆಯಾಗುವ ಸಾಧ್ಯತೆಯೂ ಹೆಚ್ಚಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಉಪಟಳ ನೀಡುವವರ ವಿರುದ್ಧ ಕ್ರಮ ಕೈಗೊಂಡಂತೆಯೂ ಸಹ ಆಗುತ್ತದೆ ಎಂದರು.
ಪೊಲೀಸ್ ಇಲಾಖೆಯ ಪ್ರಾಥಮಿಕ ಮತ್ತು ನಿಜವಾದ ಕೆಲಸವೆಂದರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು, ನೊಂದವರಿಗೆ ನೆರವು ನೀಡುವುದು, ಸಾರ್ವಜನಿಕರ ಸೇವೆಗೆ ಸದಾ ಕಾಲ ಲಭ್ಯವಿರುವುದು, ಸಮುದಾಯದ ಕಡೆಗೆ ಪೊಲೀಸ್ ಇಲಾಖೆ ಅನ್ನು ಕೊಂಡೊಯ್ಯುವುದು, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವುದು ಹಾಗೂ ತಡೆಯುವುದು, ಈ ರೀತಿಯ ಪ್ರಮುಖವಾದ ಕರ್ತವ್ಯಗಳನ್ನು ನಿರ್ವಹಿಸಬೇಕಿರುತ್ತದೆ ಎಂದರು.
ಈ ದಿನಗಳಲ್ಲಿ ನೀವು ನಿರ್ವಹಿಸುವಂತಹ ಕೆಲಸಗಳು ಮತ್ತು ನೀವು ಕೈಗೊಳ್ಳುವಂತಹ ನಿರ್ಧಾರಗಳು ಮುಂದಿನ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನೇರವಾದ ಪರಿಣಾಮ ಬೀರುತ್ತದೆ, ಆದ್ದರಿಂದ ಮೇಲ್ಕಂಡ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಿ, ಆಗ ಮಾತ್ರ ಪೆÇಲೀಸ್ ಕೆಲಸವೂ ಸುಲಭವಾಗುತ್ತದೆ ಮತ್ತು ಯಶಸ್ಸು ದೊರಕುತ್ತದೆ ಎಂದರು.
ಯಾವುದೇ ಒಂದು ಕೆಲಸ ತನಿಖೆ ಹಾಗೂ ಇತರ ಇಲಾಖೆಗಳೊಂದಿಗೆ ವ್ಯವಹರಿಸುವಾಗ ದಾಖಲಾತಿಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ಆಗ ಮಾತ್ರ ನೀವು ಮಾಡಿದಂತಹ ಕೆಲಸಕ್ಕೆ ಸೂಕ್ತ ನ್ಯಾಯ ತೊರಕಿಸಿದಂತಾಗುತ್ತದೆ. ಮಹಜರುಗಳನ್ನು ನಡೆಸುವಾಗ ಮತ್ತು ಸಾಕ್ಷಿದಾರಗಳನ್ನು ಆಯ್ದುಕೊಳ್ಳುವಾಗ ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರಿ ಪಂಚರನ್ನು ಮತ್ತು ಸರ್ಕಾರಿ ಸಾಕ್ಷಿದಾರರನ್ನು ಆಯ್ದುಕೊಳ್ಳಿ, ಇಂತಹ ನಡೆಯಿಂದ ಪ್ರಕರಣಗಳಲ್ಲಿ ಶಿಕ್ಷೆಯಾಗುವ ಪ್ರಮಾಣವು ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಪೂರ್ವವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತ್ ಗೌಡ, ಎಸ್ಪಿ ಮಿಥುನ್ ಕುಮಾರ್ ಜಿ.ಕೆ., ಹೆಚ್ಚುವರಿ ಎಸ್ಪಿಗಳಾದ ಎ.ಜಿ. ಕಾರ್ಯಪ್ಪ, ರಮೇಶ್ ಕುಮಾರ್ ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧ್ಯಕ್ಷಕರು ಮತ್ತು ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















