ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಹಾಗೂ ಹಾಲು ಒಕ್ಕೂಟದ ಆಡಳಿತ ಮಂಡಳಿ ಚುನಾವಣೆಯನ್ನು ಮುಂದೂಡಲು ಇಂದು ಜಿಲ್ಲಾ ಬಿಜೆಪಿ ವತಿಯಿಂದ ಆಗ್ರಹಿಸಲಾಗಿದೆ.
ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿತು.
ಸಹಕಾರಿ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಒಟ್ಟಿಗೆ ನಡೆಯುವುದರಿಂದ ಸಹಕಾರಿ ಕ್ಷೇತ್ರದ ಚುನಾವಣೆಗೆ ಸಂಬಂಧಪಟ್ಟಂತೆ ಪ್ರಚಾರ ಮಾಡಲು ಅನಾನುಕೂಲವಾಗುತ್ತದೆ ಹಾಗೂ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳಿಗೆ ತೊಂದರೆಯುಂಟಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
ಹಾಲು ಒಕ್ಕೂಟದ ಆಡಳಿತ ಮಂಡಳಿಯ ಹಾಗೂ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಆಡಳಿತ ಸಮಯ ಮೇ 15ರವರೆಗೂ ಇರುವುದರಿಂದ ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಯಾದ ನಂತರ ಈ ಚುನಾವಣೆಯನ್ನು ನಿಗದಿಪಡಿಸಲು ಜಿಲ್ಲಾಧಿಕಾರಿಗೆ ಆಗ್ರಹಿಸಲಾಯಿತು.
ನಿಯೋಗದಲ್ಲಿ ಶಿವಮೊಗ್ಗ ಎಪಿಎಂಸಿ ಮಾಜಿ ಅಧ್ಯಕ್ಷರಾದ ಜ್ಯೋತಿ ಪ್ರಕಾಶ್, ಹಾಲು ಒಕ್ಕೂಟದ ಮಾಜಿ ನಿರ್ದೇಶಕರಾದ ಗಾಜನೂರು ಗಣೇಶ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್ ವಿಶೇಷ ಆಹ್ವಾನಿತರಾದ ಎಚ್.ಎಂ. ಸತ್ಯನಾರಾಯಣ್ ಕಾಳಿಕಾ ಪರಮೇಶ್ವರಿ ಸೊಸೈಟಿಯ ಮಾಜಿ ಅಧ್ಯಕ್ಷರಾದ ಎಂ. ರಮೇಶ್ ಹಾಗೂ ಇನ್ನಿತರ ಸಹಕಾರಿ ಬಂಧುಗಳು ಉಪಸ್ಥಿತರಿದ್ದರು.

















