ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳ ವಿರುದ್ದ ನಡೆಯುತ್ತಿರುವ ದೌರ್ಜನ್ಯ ತಡೆಯಲು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ಸಾಮೂಹಿಕವಾಗಿ ಶ್ರಮಿಸಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ. ನಾಗಣ್ಣ ಗೌಡ ಹೇಳಿದರು.
ಆರ್’ಟಿಇ, ಪೋಕ್ಸೋ ಮತ್ತು ಬಾಲನ್ಯಾಯ ಕಾಯ್ದೆ ಕುರಿತು ಭಾಗೀದಾರರೊಂದಿಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಜೀವ ಮತ್ತು ಜೀವನ ಹಾಳು ಮಾಡುವ ಅಧಿಕಾರ ಯಾರಿಗೂ ಇಲ್ಲ. ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುವಂತಹ ಯಾವುದೇ ರೀತಿಯ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳನ್ನು ಎಲ್ಲ ಇಲಾಖೆಗಳು, ಸಂಸ್ಥೆಗಳು, ಸಾರ್ವಜನಿರು ಸೇರಿ ಸಾಮೂಹಿಕವಾಗಿ ಕೈಗೊಳ್ಳಬೇಕು. ಮಕ್ಕಳು ತಾಯಿ ಗರ್ಭದಲ್ಲಿ ಇರುವಾಗಿನಿಂದಲೇ ಅದರ ರಕ್ಷಣೆಗಾಗಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೇರಿದಂತೆ ಸರ್ಕಾರ ಶ್ರಮಿಸುತ್ತಿದೆ. ಎಲ್ಲರೂ ಸೇರಿ ಒಂದು ತಂಡವಾಗಿ ಮಕ್ಕಳ ರಕ್ಷಣೆಯಲ್ಲಿ ತೊಡಗಬೇಕಿದೆ ಎಂದರು.

ತುಮಕೂರು ಆಸ್ಪತ್ರೆಯಲ್ಲಿ ಆದ ಅಚಾತುರ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗರ್ಭಿಣಿಯರಿಗೆ ಯಾವುದೇ ರೀತಿಯ ದಾಖಲೆ ಕೇಳದಂತೆ ತಕ್ಷಣ ಚಿಕಿತ್ಸೆ ನೀಡಲು ಆದೇಶಿಸಿದ್ದು, ಆಸ್ಪತ್ರೆಗಳಲ್ಲಿ, ಪಿಹೆಚ್ಸಿಗಳಲ್ಲಿ ಕಡ್ಡಾಯವಾಗಿ ಗರ್ಭಿಣಿಯರಿಗೆ, ತೀವ್ರತರ ಖಾಯಿಲೆಯವರಿಗೆ ಹೆಲ್ತ್ ಡೆಸ್ಕ್ ಮಾಡಬೇಕು. ಕೇವಲ ವ್ಯವಸ್ಥೆ ಮಾಡಿದರೆ ಸಾಲದು, ಆಸ್ಪತ್ರೆ ಸಿಬ್ಬಂದಿಗಳು ತಕ್ಷಣ ಸ್ಪಂದಿಸಬೇಕೆಂದು ಡಿಎಚ್’ಓ ಅವರಿಗೆ ತಿಳಿಸಿದರು.

ಡಿಡಿಪಿಐ ಮಾತನಾಡಿ, 10ನೇ ತರಗತಿವರೆಗೆ ಮಕ್ಕಳಿಗೆ ಲಭ್ಯವಿರುವ ಎಲ್ಲ ಸೌಲಭ್ಯ ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1705 ಶಾಲೆ ಬಿಟ್ಟ ಮಕ್ಕಳಿದ್ದು 774 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. ಇನ್ನುಳಿದಂತೆ ವಯಸ್ಸು ಮೀರಿದ, ಅನಾರೋಗ್ಯ, ವಲಸೆ ಇತರೆ ಮಕ್ಕಳಿದ್ದು, ಈ ಬಗ್ಗೆ ಕ್ರಮ ವಹಿಸಲಾಗುತ್ತಿದೆ ಎಂದರು.
Also read: ಹೆರಿಟೇಜ್ ಇಂಡಿಯಾ ರಸಪ್ರಶ್ನೆಯಲ್ಲಿ ಸೆಮಿಫೈನಲ್ಸ್’ಗೆ ರವಿಶಂಕರ್ ವಿದ್ಯಾಮಂದಿರದ ವಿದ್ಯಾರ್ಥಿಗಳು
ಅಧ್ಯಕ್ಷರು, ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ ಬಾಲ ಕಾರ್ಮಿಕರ ಪಟ್ಟಿ ಮಾಡಿ ಬಾಲ ಕಾರ್ಮಿಕತೆ ಇರುವೆಡೆ ನಿಯಮಿತವಾಗಿ ದಾಳಿ ನಡೆಸಿ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ಅವರಿಗೆ ಇಲಾಖೆಯಿಂದ ಲಭಿಸಬೇಕಾದ ಪರಿಹಾರವನ್ನು ನೀಡಬೇಕು. ಶಾಲೆ ಬಿಟ್ಟ ಮಕ್ಕಳು, ವಲಸಿಗರು ಇತರೆ 16 ವರ್ಷ ಮೀರಿದ ಮಕ್ಕಳಿಗೆ ಕೌಶಲ್ಯಾಭಿವೃದ್ದಿ ಇಲಾಖೆ ಸಹಯೋಗದಲ್ಲಿ ಕೌಶಲ್ಯ ತರಬೇತಿ ನೀಡಬೇಕು ಎಂದರು.

ವಿದ್ಯಾರ್ಥಿಗಳಿಗೆ ಆಟೋಟಗಳು, ಕ್ಷೇತ್ರದಲ್ಲಿ ಕೆಲಸ, ಗಿಡಗಳ ಬಗ್ಗೆ ಪರಿಚಯ ಮಾಡಿಸಿ, ಗಿಡ ನೆಡುವಂತೆ, ಆಟ ಆಡುವಂತೆ ಪ್ರೇರೇಪಿಸಬೇಕು. ಹಾಗೂ ಹಾಸ್ಟೆಲ್ಗಳಲ್ಲಿನ ಆಹಾರದ ಗುಣಮಟ್ಟವನ್ನು ಮುಖ್ಯಸ್ಥರು, ಸಿಡಿಪಿಓಗಳು ಪರಿಶೀಲಿಸಬೇಕು ಎಂದರು.
ಬಾಲ್ಯ ವಿವಾಹ ತಡೆಗೆ ಎಲ್ಲರೂ ಸಹಕರಿಸಬೇಕು. ಸಹಕಾರ ನೀಡದಿದ್ದರೆ ಪೊಲೀಸ್ ಇಲಾಖೆ ಸಹಾಯ ಪಡೆಯಬೇಕು. ತಹಶೀಲ್ದಾರ್ ಅಧ್ಯಕ್ಷತೆ, ಇಓ, ಪಿಡಿಓ, ಎನ್’ಜಿಒ ಗಳನ್ನೊಳಗೊಂಡ ತಾಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಸಮಿತಿಗಳ ಸಭೆಯನ್ನು ನಿಯಮಿತವಾಗಿ ಮಾಡಿ ಮಕ್ಕಳ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಣಾಮಕಾರಿ ಕ್ರಮ ಕೈಗೊಂಡಲ್ಲಿ ಮಕ್ಕಳ ವಿರುದ್ದ ದೌರ್ಜನ್ಯ ನಿಯಂತ್ರಣಕ್ಕೆ ಬರುತ್ತದೆ. ಹಾಗೂ ಇಲಾಖೆಗಳಲ್ಲಿನ ಯಶೋಗಾಥೆಗಳನ್ನು ಹೆಚ್ಚು ಪ್ರಚಾರ ಮಾಡಬೇಕು ಎಂದರು.

ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ 25 ಸರ್ಕಾರಿ ಶಾಲೆಗಳನ್ನು ಗುರುತಿಸಿ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ಸಹ ಗುರುತಿಸಲಾಗುವುದು. ಪ್ರತಿ ತಾಲ್ಲೂಕಿನಲ್ಲಿ ನೋಡಲ್ ಅಧಿಕಾರಿಗಳಿದ್ದು ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ 2-3 ತಿಂಗಳಿಗೊಮ್ಮ ಸಭೆ ನಡೆಸಿ ಮಕ್ಕಳ ಸಮಸ್ಯೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಸಹಕಾರ ಮತ್ತು ಸಹಾಯವನ್ನು ಇಲಾಖೆ ಒದಗಿಸಲಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ್ ಮಾತನಾಡಿ, ಪ್ರತಿ ತಿಂಗಳು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪೋಕ್ಸೋ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರೌಢಶಾಲೆಗಳಲ್ಲಿ ಒಂದು ತಾಸು ಜಾಗೃತಿ ಕಾರ್ಯಕ್ರಮ ಮಾಡಬೇಕು. ಮಕ್ಕಳ ಸಹಾಯವಾಣಿ 1098ನ್ನು ಶಾಲೆಯ ಪ್ರತಿ ಬೋರ್ಡಿನ ಮೇಲೆ ಬರೆಸಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯ್ತಿ ಸಿಇಓ ಎನ್.ಡಿ. ಪ್ರಕಾಶ್, ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ , ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾರ್ಯಕ್ರಮಗಳ ಸಂಯೋಜಕರು ಹಾಜರಿದ್ದರು.









Discussion about this post