ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಶಾಲಾ ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಹಾಗೂ ಕಾನೂನು ವಿರೋಧಿ ಚಟುವಟಿಕೆಗಳಿಂದ ದೂರವಿಡುವ ಹಾಗೂ ಪರಿವರ್ತನೆ ಮಾಡುವ ವಿಚಾರವಾಗಿ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು ಹಾಗೂ ಉಪನ್ಯಾಸಕರ ಸಭೆಗೆ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಚಾಲನೆ ನೀಡಿದರು.

ಯುವಪೀಳಿಗೆಯನ್ನು ಮುಂದಿನ ಸತ್ಪ್ರಜೆಗಳಾಗಿ ರೂಪಿಸುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪ್ರತಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿ ಸಭೆಗಳನ್ನು ಏರ್ಪಡಿಸಿ ಮನ ಪರಿವರ್ತಿಸುವ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಪ್ರತಿ ಕಾಲೇಜಿನ ಮುಖ್ಯಸ್ಥರು, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಒಳಗೊಂಡ ಸಂಯೋಜಕರನ್ನು ನೇಮಿಸಿ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಶಾಲಾ ಮುಖ್ಯಸ್ಥರುಗಳು ಶಾಲಾ ಆವರಣದಲ್ಲಿ ಪೊಲೀಸ್ ಗಸ್ತು ವ್ಯವಸ್ಥೆಯನ್ನು ಹೆಚ್ಚಿಸುವ ಬಗ್ಗೆ ಮತ್ತು ವಾಹನಗಳನ್ನು ಗಸ್ತನ್ನು ಇನ್ನು ಹೆಚ್ಚಿಗೆ ಮಾಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ವಾಹನ ಗಸ್ತು ಹಾಗೂ ಪೊಲೀಸರ ಗಸ್ತು ವ್ಯವಸ್ಥೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ.

ಪ್ರತಿ ತಿಂಗಳು ಶಾಲಾ-ಕಾಲೇಜುಗಳಲ್ಲಿ ಸಭೆಗಳನ್ನು ಏರ್ಪಡಿಸುವ ಬಗ್ಗೆ ಇದೇ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಾಯಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















