ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರದ 5 ಕೆಜಿ ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯನ್ನು ನೀಡಲಾಗುತ್ತಿದೆ. ಆದರೆ, ಪಡಿತರ ದಾಸ್ತಾನು ವಿವಿಧ ಕಾರಣಗಳಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ 15ನೇ ತಾರೀಖಿನಿಂದ ಎತ್ತುವಳಿ ನೀಡಲಾಗುತ್ತಿದೆ ಎಂದು ದೂರಿದರು.

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾದ ಕಮಿಷನ್ ಹಣವನ್ನು ಆಯಾ ತಿಂಗಳಲ್ಲೇ ಪಾವತಿಗೆ ಕ್ರಮವಹಿಸಬೇಕು. ಮತ್ತು ಸುಮಾರು 7 ವರ್ಷಗಳಿಂದ ಇ–ಕೆವೈಸಿ ಮಾಡಿರುವ ಹಣವನ್ನು ಸಹ ನೀಡಿರುವುದಿಲ್ಲ. ಕೂಡಲೇ ಇ-ಕೆವೈಸಿ ಹಣವನ್ನು ಬಿಡುಗಡೆ ಮಾಡಬೇಕು. ಹಾಗೂ ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ 24 ಗಂಟೆಗಳ ನಂತರ ಬಿಲ್ ಅಪ್ಡೇಟ್ ಆಗುತ್ತಿರುತ್ತದೆ. ಆದ್ದರಿಂದ ಕೂಡಲೇ ಈ ತಾಂತ್ರಿಕ ಸಮಸ್ಯೆ ಬಗೆಹರಿಸಿ ಬಿಲ್ ಹಾಕಿದ ಕೂಡಲೇ ವಿತರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಉದ್ದೇಶಿಸಿದ್ದು, ಇದನ್ನು ಕೈಬಿಡಬೇಕು. 5 ಕೆಜಿ ಅನ್ನಭಾಗ್ಯ ಅಕ್ಕಿ ನೀಡಿದರೆ ಸರ್ಕಾರಕ್ಕೆ 481 ಕೋಟಿ ರೂ. ವೆಚ್ಚವಾಗಲಿದ್ದು, ಅದೇ ಆಹಾರದ ಕಿಟ್ ನೀಡಿದರೆ 173 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ರಾಜ್ಯದಲ್ಲಿ 20500ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳಿವೆ. ಕೆಲವು ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದ್ದು, ಶೀಘ್ರವೇ ಎಲ್ಲಾ ಜಿಲ್ಲೆಗಳಲ್ಲೂ ಸ್ಮಾರ್ಟ್ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಘದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಕುರಿತು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂಬ ಚಲನಚಿತ್ರವನ್ನು ನಿರ್ಮಿಸಲಾಗಿದ್ದು, ಈಗಾಗಲೇ ಡಬ್ಬಿಂಗ್ ನಡೆಯುತ್ತಿದೆ. ಶೀಘ್ರದಲ್ಲೇ ಈ ಚಿತ್ರ ಬಿಡುಗಡೆಯಾಗಲಿದ್ದು, ರಾಜ್ಯದ ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ಅಂಗಡಿಯಿಂದ 20 ಪಡಿತರ ಚೀಟಿದಾರರಿಗೆ ಈ ಚಿತ್ರ ನೋಡುವಂತೆ ಮಾಡಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಿ. ತಾಯಣ್ಣ, ಚನ್ನಕೇಶವೇಗೌಡ, ಸಿದ್ಧಲಿಂಗಯ್ಯ, ಜಿ.ಹೆಚ್. ಲೋಕೇಶ್, ಪಿ.ಡಿ. ಮಂಜಪ್ಪ, ಕೆ. ಈಶ್ವರಾಚಾರ್, ಜಿಲ್ಲಾಧ್ಯಕ್ಷ ಕೆ. ಲೋಕೇಶ್, ವಿ. ಮುರುಗೇಶ್, ನಾಗೇಶ್, ರಾಜೇಶ್, ದೇವರಾಜ್, ಮಂಟೇಸ್ವಾಮಿ, ರಾಜೇಂದ್ರ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post