ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಸ್ಥಳೀಯ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಎಲ್ಲಾ ಚುನಾಯಿತ ಜನಪ್ರತಿನಿಧಿಗಳಿಗೆ ಮತ್ತು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳಿಗೆ “ಅಂತ್ಯೋದಯ” ಎಂಬ ಹೆಸರಿನಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಆರುಣ್ D S Arun ಹೇಳಿದರು.
ಜಿಲ್ಲಾ ಮಟ್ಟದ “ಅಂತ್ಯೋದಯ” ಕಾರ್ಯಕ್ರಮ ಆಯೋಜಿಸುವ ಕುರಿತಂತೆ ವಿಧಾನ ಪರಿಷತ್ ಶಾಸಕರಾದ ಡಿ. ಎಸ್ ಅರುಣ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆದು ಕಾರ್ಯಕ್ರಮದ ಸಿದ್ಧತೆ ಕುರಿತು ವಿವರವಾಗಿ ಚರ್ಚಿಸಲಾಯಿತು.
ಸಭೆಯ ನಂತರ ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ ಮಾತನಾಡಿ, ರಾಜ್ಯ ಸರ್ಕಾರದ ಕಲ್ಯಾಣ ಇಲಾಖೆಗಳಾದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ, ಡಾ: ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ದೇವರಾಜ್ ಅರಸ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಇನ್ನಿತರೆ ಅಭಿವೃದ್ಧಿ ನಿಗಮಗಳಿಂದ ಮತ್ತು ಬೇರೆ ಬೇರೆ ಇಲಾಖೆಗಳಿಂದ ಸಾರ್ವಜನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಮಾಹಿತಿಯನ್ನು ಜನಪ್ರತಿನಿಧಿಗಳಿಗೆ ಮಾಹಿತಿ ಕಾರ್ಯಾಗಾರ ನೀಡುವ ಮೂಲಕ ಅರಿವು ಮೂಡಿಸಲಾಗುವುದು. ಸದರಿ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ಜನಸಾಮಾನ್ಯರಿಗೂ ಸರ್ಕಾರದ ಯೋಜನೆಗಳನ್ನು ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರ ಮೂಲಕ ತಲುಪಿಸುವ ಯೋಜನೆಯೇ “ಅಂತ್ಯೋದಯ” ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮ ಸೆಪ್ಟೆಂಬರ್ ಮೊದಲ ವಾರದಲ್ಲಿ ಶಿವಮೊಗ್ಗ ನಗರದ ಸಾಗರ ರಸ್ತೆಯ ಫೆಸಿಟ್ ಕಾಲೇಜು ಆವರಣದಲ್ಲಿ ನಡೆಸಲು ನಿರ್ಣಯಿಸಿದ್ದು, ಅಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಪೂರ್ಣ ದಿನ ಹಂತ ಹಂತವಾಗಿ ನಡೆಯಲಿದೆ. ಕಾರ್ಯಕ್ರಮ ನಡೆಸುವ ಸ್ಥಳದಲ್ಲಿ ವಿವಿಧ ಇಲಾಖೆಗಳು ಅವರ ಇಲಾಖೆಯ ಕಾರ್ಯಕ್ರಮಗಳನ್ನು ಭಿತ್ತರಿಸುವ ಮಳಿಗೆಗಳನ್ನು ತೆರೆಯಲಾಗುವುದು. ಇದರ ಪ್ರಯೋಜನವನ್ನು ಜಿಲ್ಲೆಯ 262 ಗ್ರಾಮ ಪಂಚಾಯಿತಿಗಳ 2660 ಸದಸ್ಯರುಗಳು, ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಯ 230 ಸದಸ್ಯರುಗಳಿಗೆ ಇದರ ಪ್ರಯೋಜನ ದೊರೆಯಲಿದೆ ಎಂದು ಮಾಹಿತಿ ನೀಡಿದರು.
Also read: ನ.1ರಂದು ನಟ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ
ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post